ಮಂಗಳೂರು: ಕೋವಿಡ್ ಸೋಂಕಿನ ಸಮರ್ಪಕ ನಿರ್ವಹಣೆಯಲ್ಲಿ ಪೌರಕಾರ್ಮಿಕರ ಸೇವೆ ಶ್ಲಾಘನೀಯವಾಗಿದ್ದು, ಅವರಿಂದಲೇ ಕೋವಿಡ್ ವಿರುದ್ಧ ಜಯ ಸಾಧಿಸಲು ಸಾಧ್ಯವಾಯಿತು. ಈಗ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರಲ್ಲಿ ಶೇ 25ರಷ್ಟು ಕಾರ್ಮಿಕರು ಮಂಗಳವಾರದಿಂದ ತ್ಯಾಜ್ಯ ವಿಲೇವಾರಿಗೂ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿದರು.
ಸೋಮವಾರ ಇಲ್ಲಿ ಪೌರ ಕಾರ್ಮಿಕರೊಂದಿಗೆ ಸಭೆ ನಡೆಸಿದ ಅವರು, ‘ಮುಂಗಾರು ಆರಂಭಗೊಂಡಿದೆ. ಮಂಗಳೂರು ನಗರದಲ್ಲಿಯೂ ಹೆಚ್ಚು ಮಳೆಯಾಗುತ್ತಿದೆ. ತ್ಯಾಜ್ಯ ಇದ್ದರೆ ರಸ್ತೆಗಳಲ್ಲಿ ಮತ್ತಷ್ಟು ತೊಂದರೆಯಾಗುತ್ತದೆ, ನಾಗರಿಕರ ಆರೋಗ್ಯ ಹಾಗೂ ನಗರದ ಸ್ವಚ್ಛತೆ ದೃಷ್ಟಿಯಿಂದ ಪೌರ ಕಾರ್ಮಿಕರು ಕೆಲಸ ಪ್ರಾರಂಭಿಸಬೇಕು’ ಎಂದರು.
ಜಿಲ್ಲೆಯಲ್ಲಿ ಪೌರಕಾರ್ಮಿಕರಿಗೆ ಎದುರಾದ ಸಮಸ್ಯೆಗಳನ್ನು ಜಿಲ್ಲಾಡಳಿತ ಕೂಡಲೇ ಬಗೆಹರಿಸುತ್ತದೆ. ಸಮಸ್ಯೆಗಳಿದ್ದಲ್ಲಿ ಸಭೆ ಮಾಡಲಾಗುವುದು. ಮಳೆಗಾಲದಲ್ಲಿ ಸೊಳ್ಳೆ ಹಾಗೂ ನೊಣಗಳ ಕಾಟ ಆಗದಂತೆ, ಪೌರ ಕಾರ್ಮಿಕರು ಸ್ವಚ್ಛತೆಗೆ ಸಹಕರಿಸಬೇಕು. ತ್ಯಾಜ್ಯ ವಾಹನಗಳ ಸಂಚಾರ ನಿಲ್ಲಬಾರದು ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಸಂಘಟನೆಗಳ ಮುಖ್ಯಸ್ಥರು ಸಭೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.