ಮಂಗಳೂರು: ನದಿ ನೀರಿನ ಒಳ ಹರಿವು, ಲಭ್ಯತೆಯನ್ನು ಆಧರಿಸಿ, ಕುಡಿಯುವ ನೀರಿನ ಸರಬರಾಜನ್ನು ಮಾಡುವ ಮೂಲಕ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆಯಲ್ಲಿ ನೀರಿನ ಮೂಲಗಳು ಬತ್ತುವುದರಿಂದ ನದಿಯಲ್ಲಿ ನೀರಿನ ಹರಿವು ದಿನೇ ದಿನೇ ಕ್ಷೀಣಿಸುತ್ತಿದೆ. ಸಾಮಾನ್ಯವಾಗಿ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ನದಿಯ ನೀರು ಆಧಾರವಾಗಿದೆ. ಮುಂದಿನ ಮುಂಗಾರು ಮಳೆ ಪ್ರಾರಂಭದವರೆಗೆ ಲಭ್ಯತೆಯನ್ನು ಆಧರಿಸಿ, ಕುಡಿಯುವ ನೀರಿನ ಸರಬರಾಜು ಮಾಡಬೇಕು ಎಂದು ಸೂಚನೆ ನೀಡಿದರು.
ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಜನಸಾಮಾನ್ಯರಿಗೆ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.
ಸಾರ್ವಜನಿಕರು ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಲು ಅರಿವು ಮೂಡಿಸಬೇಕು. ಕಡಿಮೆ ಪ್ರಮಾಣದಲ್ಲಿ ಬಳಸುವಂತೆ ಮನವರಿಕೆ ಮಾಡಿಕೊಡಬೇಕು ಎಂದ ಅವರು, ವಾಣಿಜ್ಯ ಬಳಕೆಗೆ ಸಂಪರ್ಕ ನೀಡಿರುವ ನಲ್ಲಿ ನೀರಿನ ಸೌಲಭ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂದರು.
ಕುಡಿಯುವ ನೀರು ಸರಬರಾಜು ಕೊಳವೆಗಳಲ್ಲಿ ಆಗುತ್ತಿರುವ ಸೋರಿಕೆಯ ದುರಸ್ತಿ ಕಾರ್ಯಗಳನ್ನು ತಕ್ಷಣದಲ್ಲಿಯೇ ಕೈಗೊಳ್ಳಬೇಕು. ನಲ್ಲಿ ನೀರಿನ ಪೈಪ್ಗಳಿಗೆ ನೇರವಾಗಿ ಕೆಲವರು ಪಂಪ್ಗಳನ್ನು ಅಳವಡಿಸಿ ನೀರನ್ನು ಸೆಳೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆಯೂ ಸಹ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ನದಿಯ ನೀರಿನ ಲಭ್ಯತೆ ಜೊತೆಗೆ ಇತರೆ ನೀರಿನ ಮೂಲಗಳನ್ನು ಗುರುತಿಸಿ, ಅವುಗಳ ಬಳಕೆಗೆ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದ ಅವರು, ನೀರಿನ ಲಭ್ಯತೆಯ ಪ್ರಮಾಣ, ಅವುಗಳ ಮೇಲ್ವಿಚಾರಣೆ ನಡೆಸಲು ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಸೂಚನೆ ನೀಡಿದರು.
ನದಿ ಪಾತ್ರದ ಅಕ್ಕಪಕ್ಕದ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ಅನಧಿಕೃತ ಪಂಪ್ಸೆಟ್ಗಳನ್ನು ತೆರವುಗೊಳಿಸಲು ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಮೇಯರ್ ಪ್ರೇಮಾನಂದ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮೋನಾ ರೋತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.