ADVERTISEMENT

ಪುತ್ತೂರು: ಕೂಡುರಸ್ತೆ, ಬಾಲಾಯದಲ್ಲಿ ನೀರಿನ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2023, 12:41 IST
Last Updated 4 ಜೂನ್ 2023, 12:41 IST

ಪುತ್ತೂರು: ಪುತ್ತೂರು ತಾಲ್ಲೂಕಿನ ಮುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ವೆ ಗ್ರಾಮದ ಕೂಡುರಸ್ತೆ ಮತ್ತು ಬಾಲಾಯ ಪರಿಸರದಲ್ಲಿ ಕೆಲ ದಿನಗಳಿಂದ ನೀರಿನ ಸಮಸ್ಯೆ ಎದುರಾಗಿದೆ.

‌ಕೂಡುರಸ್ತೆ ಮತ್ತು ಬಾಲಾಯ ಪರಿಸರದಲ್ಲಿ ಸುಮಾರು 60 ಮನೆಗಳಿದ್ದು, ಇಲ್ಲಿನ ಬಹುತೇಕ ಕುಟುಂಬಗಳು ಗ್ರಾಮ ಪಂಚಾಯಿತಿ ಸರಬರಾಜು ಮಾಡುವ ಕುಡಿಯುವ ನೀರನ್ನೇ ಆಶ್ರಯಿಸಿವೆ. ಕೆಲ ದಿನಗಳಿಂದ ಈ ಭಾಗಕ್ಕೆ ನೀರಿನ ಪೂರೈಕೆ ಸ್ಥಗಿತಗೊಂಡಿದೆ.

ನೀರಿಗಾಗಿ ಇಲ್ಲಿನ ನಿವಾಸಿಗಳು ದೂರ ಪ್ರದೇಶಗಳಿಗೆ ತೆರಳಿ ಖಾಸಗಿಯವರ ನೀರಿನ ವ್ಯವಸ್ಥೆ ಅವಲಂಬಿಸುವಂತಾಗಿದೆ. ಈ ಪರಿಸರಕ್ಕೆ ನೀರು ಸರಬರಾಜು ಮಾಡುತ್ತಿದ್ದ ಗ್ರಾಮ ಪಂಚಾಯಿತಿಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿರುವುದೇ ಸಮಸ್ಯೆಗೆ ಕಾರಣ ಎಂದು ಗೊತ್ತಾಗಿದೆ.

ADVERTISEMENT

ಕೂಡುರಸ್ತೆ ಮತ್ತು ಬಾಲಾಯ ಪರಿಸರಕ್ಕೆ 5 ದಿನಗಳಿಂದ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ಆದರೆ, ಸಂಬಂಧಿಸಿದ ಅಧಿಕಾರಿಗಳು ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ದೂರಿರುವ ಸ್ಥಳೀಯರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಲ್ಲಿನ ಜನರ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ: ನೀರಿನ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ದೇನೆ. ಆದರೆ, ಗ್ರಾಮ ಪಂಚಾಯಿತಿ ಸ್ಪಂದಿಸಿಲ್ಲ. ನೀರಿನ ಸಮಸ್ಯೆಯನ್ನು ನಿವಾರಿಸದೆ ಇದ್ದರೆ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮುಂಡೂರು ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಆಲಿ ನೇರೋಳ್ತಡ್ಕ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.