ADVERTISEMENT

ನೀರಿನ ಬವಣೆ- ಅಧಿಕಾರಿಗಳು ಸ್ಪಂದಿಸಲಿ: ಯು.ಟಿ. ಖಾದರ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 16:20 IST
Last Updated 31 ಮಾರ್ಚ್ 2023, 16:20 IST
ಶಾಸಕ ಯು.ಟಿ.ಖಾದರ್ 
ಶಾಸಕ ಯು.ಟಿ.ಖಾದರ್    

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ಹೆಚ್ಚುತ್ತಿದ್ದು, ಅದಕ್ಕೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಬೇಕು. ಮುಂದಿನ ಎರಡು ತಿಂಗಳು ನೀರಿಗೆ ಭಾರೀ ಸಮಸ್ಯೆಯಾಗುವ ಮುನ್ಸೂಚನೆಯಿದ್ದು, ಅಧಿಕಾರಿಗಳು ಈಗಲೇ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ವಿಧಾನಸಭೆ ವಿಪಕ್ಷದ ಉಪನಾಯಕ ಯು.ಟಿ. ಖಾದರ್‌ ಹೇಳಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ ಸಮಸ್ಯೆಗೆ ಸ್ಪಂದಿಸಬೇಕಾಗಿದ್ದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರು ಕಳೆದ ಎರಡು ತಿಂಗಳಿನಿಂದ ಬಿಜೆಪಿ ಪ್ರಚಾರ ಕಾರ್ಯದಲ್ಲೇ ಮಗ್ನರಾಗಿದ್ದರು. ಈ ಅವಧಿಯಲ್ಲಿ ನೀರಿನ ಸಮಸ್ಯೆ ಪರಿಹಾರಕ್ಕೆ ಸರ್ಕಾರವು ದೂರದೃಷ್ಟಿಯ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.

‘ಇದೀಗ ಚುನಾವಣಾ ನೀತಿಸಂಹಿತೆ ಇರುವುದರಿಂದ ಜನಪ್ರತಿನಿಧಿಗಳು ನೇರವಾಗಿ ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಹೀಗಾಗಿ, ಅಧಿಕಾರಿಗಳೇ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು. ಅಗತ್ಯ ಬಿದ್ದರೆ ಟ್ಯಾಂಕರ್‌ನಲ್ಲಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರಿನ ಸಮಸ್ಯೆ ಕುರಿತಂತೆ ಸಹಾಯವಾಣಿಯನ್ನು ತೆರೆಯಬೇಕು’ ಎಂದು ತಿಳಿಸಿದರು.

ADVERTISEMENT

‘ಚುನಾವಣಾ ಘೋಷಣೆಯಾಗಿ ನೀತಿಸಂಹಿತೆ ಅನುಷ್ಠಾನ ಮಾಡಲಾಗುತ್ತಿದೆ. ಆದರೆ, ನೀತಿಸಂಹಿತೆಯ ಹೆಸರಿನಲ್ಲಿ ಅಧಿಕಾರಿಗಳು ಜನರಿಗೆ ತೊಂದರೆ ನೀಡಬಾರದು. ಉಳ್ಳಾಲ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮದ ಬ್ಯಾನರ್‌ಗಳನ್ನು ತೆರವು ಮಾಡಲಾಗಿದೆ. ರಾಜಕೀಯ ನಾಯಕರ ಭಾವಚಿತ್ರ ಇಲ್ಲದಿದ್ದರೂ ಬ್ಯಾನರ್ ತೆಗೆದಿರುವುದು ಸರಿಯಲ್ಲ. ಅಧಿಕಾರಿಗಳ ಏಕಾಏಕಿ ನಿರ್ಧಾರ ಜನರಿಗೆ ಗೊಂದಲ ಮೂಡಿಸಿದೆ’ ಎಂದು ಖಾದರ್ ಹೇಳಿದರು.

‘ನೀತಿಸಂಹಿತೆಯ ಕುರಿತಂತೆ ಅಧಿಕಾರಿಗಳು ಸ್ಪಷ್ಟ ಮಾಹಿತಿಯನ್ನು ನೀಡಬೇಕು. ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ತೆರೆದು, ಜನರ ಗೊಂದಲ ನಿವಾರಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಸದಾಶಿವ ಉಳ್ಳಾಲ್‌, ಉದಯ ಆಚಾರ್, ಸುಹೈಲ್‌ ಕಂದಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.