
ಉಪ್ಪಿನಂಗಡಿ: ಸರ್ಕಾರ ಹಲವು ವಿಶಿಷ್ಟ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಮಹಿಳೆಯರು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವುದಕ್ಕಾಗಿ ತರಬೇತಿ ಕೇಂದ್ರಗಳನ್ನೂ ತೆರೆಯುತ್ತಿದೆ. ಇವುಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು, ಊರಿನ ಅಭಿವೃದ್ಧಿಗೆ ಸಹಕಾರಿಗಳಾಗಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಬಜತ್ತೂರು ಗ್ರಾಮ ಪಂಚಾಯಿತಿಯಲ್ಲಿ ದೀನ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ₹ 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ‘ಸಾವಿತ್ರಿ ಬಾಯಿ ಫುಲೆ ಕೌಶಲಾಭಿವೃದ್ಧಿ ತರಬೇತಿ ಕೇಂದ್ರ’ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗಾಗಿಯೇ ಹಲವು ಯೋಜನೆಗಳಿವೆ. ಆದರೆ, ಮಾಹಿತಿ ಕೊರತೆಯಿಂದ ಕೆಲವು ಯೋಜನೆಗಳಿಗೆ ಫಲಾನುಭವಿಗಳ ಅರ್ಜಿಗಳೇ ಇರುವುದಿಲ್ಲ. ಇಲ್ಲಿ ನಿರ್ಮಾಣವಾದ ಕಟ್ಟಡದ ಮೂಲಕ ಸಂಜೀವಿನಿ ಒಕ್ಕೂಟದ ಸದಸ್ಯರು ತರಬೇತಿ ನೀಡುವ ಜತೆಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಪುತ್ತೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ, ಮಹಿಳೆಯರಿಗೆ ಇಚ್ಛಾಶಕ್ತಿ ಇದ್ದರೆ ಈ ಕೇಂದ್ರದ ಮೂಲಕ ಅಣಬೆ, ಜೇನು, ಟೈಲರಿಂಗ್, ಎಂಬ್ರಾಯಿಡರಿ ಬಗ್ಗೆ ತರಬೇತಿ ನೀಡಿ ಸ್ವಾವಲಂಬಿಗಳಾಗಬಹುದು ಎಂದರು.
ಬಜತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು.
ಪುತ್ತೂರು ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ವಿಲ್ಫ್ರೆಡ್ ಲಾರೆನ್ಸ್ ರಾಡ್ರಿಗಸ್, ನರೇಗಾ ಯೋಜನೆಯ ತಾಂತ್ರಿಕ ಸಹಾಯಕಿ ಲಕ್ಷ್ಮಿ, ಜ್ಯೋತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭವ್ಯಾ ಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿಮಲ, ಸದಸ್ಯರಾದ ಮೋನಪ್ಪ ಗೌಡ, ಮಾಧವ ಪೂಜಾರಿ, ಪ್ರೆಸಿಲ್ಲ, ಸ್ಮಿತಾ, ಅರ್ಪಿತ ರೈ, ರತ್ನ, ಪ್ರೇಮ, ಯಶೋದಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ, ಕಾರ್ಯದರ್ಶಿ ಕೊರಗಪ್ಪ ಭಾಗವಹಿಸಿದ್ದರು.
ಹುಣ್ಣಸೆ ಹಣ್ಣಿನ ಗಟ್ಟಿ ಬಿಡುಗಡೆ: ಬಜತ್ತೂರು ಸಂಜೀವಿನಿ ಒಕ್ಕೂಟದ ಲೋಲಾಕ್ಷಿ ಎಂಬುವರು ತಯಾರಿಸಿದ ಹುಣಸೆ ಹಣ್ಣಿನ ಗಟ್ಟಿಯನ್ನು ಶಾಸಕ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಸ್ವಾಗತಿಸಿ, ಸಂಜೀವಿನಿ ಒಕ್ಕೂಟದ ಸುನಿತಾ ವಂದಿಸಿದರು. ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಪರಂದಾಜೆ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.