ಮಂಗಳೂರು: ‘ಹೃದಯದಿಂದ ಮಹಿಳೆಯ ಬಗ್ಗೆ ಗೌರವ ಭಾವ ಮೂಡಿದಾಗ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಾಗುತ್ತದೆ. ಮನಃ ಪರಿವರ್ತನೆಯೇ ಇದಕ್ಕೆ ಉತ್ತಮ ಮಾರ್ಗ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಗುರುವಾರ ಇಲ್ಲಿ ಆಯೋಜಿಸಿದ್ದ ಮಹಿಳಾ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯಕರ ಜೀವನ ಹಾಗೂ ಶಿಕ್ಷಣ ಮಹಿಳೆಗೆ ದೊರೆಯಬೇಕು. ಕಾಯ್ದೆಗಿಂತ ಮುಖ್ಯವಾಗಿ ಮಹಿಳೆಯೆಡೆಗೆ ಗೌರವದ ದೃಷ್ಟಿಕೋನ ಬೆಳೆದಾಗ ಬದಲಾವಣೆ ಸಾಧ್ಯವಾಗುತ್ತದೆ
ಎಂದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳಾ ಸಾಮರ್ಥ್ಯವನ್ನು ಕುಂದಿಸುವ ಕಾರ್ಯ ಇಂದಿಗೂ ಮುಂದುವರಿದಿದೆ ಎಂಬುದು ದುಃಖದ ವಿಚಾರ. ತಾಯಿ, ಪತ್ನಿ, ಸಹೋದರಿ, ಅತ್ತೆಯಾಗಿ ಹೆಣ್ಣನ್ನು ನೋಡಲು ಬಯಸುವ ಸಮಾಜ ಇಂದಿಗೂ ಆಕೆಯನ್ನು ಮಗಳಾಗಿ ಒಪ್ಪಿಕೊಳ್ಳಲು ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿಲ್ಲ. ಪರಿಣಾಮವಾಗಿ ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ ಎಂದು ವಿಷಾದ ವ್ಯಕ್ತಪಡಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಭಾಷಿಣಿ ದಿಕ್ಸೂಚಿ ಭಾಷಣ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸುಧಾಕರ ಕೆ., ಭಾರತ ಸೇವಾ ದಳದ ಜಿಲ್ಲಾ ಘಟಕದ ಅಧ್ಯಕ್ಷ ಬಶೀರ್ ಬೈಕಂಪಾಡಿ, ಪ್ರಮುಖ ಪ್ರಭಾಕರ ಶ್ರೀಯಾನ್ ಇದ್ದರು.
ಭಾರತ ಸೇವಾ ದಳದ ಜಿಲ್ಲಾ ಘಟಕದ ಕಾರ್ಯದರ್ಶಿ ಟಿ.ಕೆ. ಸುಧೀರ್ ಸ್ವಾಗತಿಸಿದರು. ಕೇಂದ್ರ ಸಮಿತಿ ಸದಸ್ಯ ವಿ.ವಿ. ಫ್ರಾನ್ಸಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.