ಮಂಗಳೂರು: ಪತ್ರಿಕೋದ್ಯಮದಲ್ಲಿ ಛಾಯಾಗ್ರಹಣವೂ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಛಾಯಾಚಿತ್ರವೊಂದಕ್ಕೆ ಅಗಾಧ ವಿಚಾರಗಳನ್ನು ಸರಳವಾಗಿ ಮತ್ತು ಕ್ರಿಯಾತ್ಮಕವಾಗಿ ತಿಳಿಸಬಲ್ಲ ಸಾಮರ್ಥ್ಯವಿದೆ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಪೆಜತ್ತಾಯ ಹೇಳಿದರು.
ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ನಡೆದ ಭಾನುವಾರ ನಡೆದ ‘ಪತ್ರಿಕೋದ್ಯಮ ಮತ್ತು ಛಾಯಾಗ್ರಹಣ’ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅವರು ಮಾತನಾಡಿದರು.
ನುಡಿಚಿತ್ರ, ವರದಿ, ಲೇಖನ ಮುಂತಾದವುಗಳಿಗೆ ಸೂಕ್ತ ಛಾಯಾಚಿತ್ರ ಅತ್ಯಗತ್ಯ. ಆದ್ದರಿಂದ ಛಾಯಾಗ್ರಹಣವೂ ಪತ್ರಿಕೋದ್ಯಮದ ಅವಿಭಾಜ್ಯ ಅಂಗ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಶೇಖರ ಹೆಬ್ಬಾರ್ ಸಿ. ಮಾತನಾಡಿ, ‘ವಿದ್ಯಾರ್ಥಿಗಳು ಛಾಯಾಗ್ರಹಣದ ಕಲೆಯನ್ನು ಮೈಗೂಡಿಸಿಕೊಳ್ಳಬೇಕು. ಪರಿಸರ, ಸಮಾಜದ ಆಗುಹೋಗುಗಳನ್ನು ಬಿಂಬಿಸುವಲ್ಲಿ ಛಾಯಾಗ್ರಹಣ ಮಹತ್ತರ ಪಾತ್ರವನ್ನು ನಿರ್ವಹಿಸುತ್ತದೆ’ ಎಂದು ಹೇಳಿದರು.
ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಎಂ.ಸಿ.ಜೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಚೈತನ್ಯ ಕೆ.ಎಂ., ರಥಬೀದಿ ಕಾಲೇಜಿನ ಮುಖ್ಯ ಶೈಕ್ಷಣಿಕ ಸಲಹೆಗಾರ ಡಾ.ಶಿವರಾಮ ಪಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಜಯಕರ ಭಂಡಾರಿ, ಪತ್ರಿಕೋದ್ಯಮ ವಿಭಾಗ ಸಂಚಾಲಕಿ ಡಾ.ಜಯಶ್ರೀ ಬಿ., ಪತ್ರಿಕೋದ್ಯಮ ಉಪನ್ಯಾಸಕರಾದ ಚೇತನ ನಾಯಕ್ ಕೆ., ಅಭಿಷೇಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಶೇಷಪ್ಪ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಿದರು.
ಪತ್ರಿಕೋದ್ಯಮ ವಿಭಾಗ ಸಂಚಾಲಕಿ ಡಾ.ಜಯಶ್ರೀ ಬಿ. ಸ್ವಾಗತಿಸಿದರು. ವಿದ್ಯಾರ್ಥಿನಿ ಸುಜಾತಾ ವಂದಿಸಿದರು. ವಿದ್ಯಾರ್ಥಿನಿ ತೇಜಸ್ವಿನಿ ಕೆ. ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.