ಮಂಗಳೂರು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಹಾಗೂ ಶರತ್ಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ತನಿಖಾ ವರದಿಯನ್ನು ಸಿಬಿಐಗೆ ಹಸ್ತಾಂತರಿಸದೇ ಇರುವುದನ್ನು ಖಂಡಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಸರಗೋಡಿನ ಜಿಲ್ಲಾ ಕ್ರೈಂ ಬ್ರ್ಯಾಂಚ್ ಕಚೇರಿ ಎದುರು ಬುಧವಾರ ಹಮ್ಮಿಕೊಂಡಿದ್ದ ಜಾಥಾ ಹಿಂಸಾರೂಪಕ್ಕೆ ತಿರುಗಿದ್ದು, ಡಿವೈಎಸ್ಪಿ ಸೇರಿದಂತೆ ಏಳು ಪೊಲೀಸರು ಹಾಗೂ ಹತ್ತಕ್ಕೂ ಅಧಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ.
ವಿದ್ಯಾನಗರದಿಂದ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತರು ಪೊಲೀಸರ ಬ್ಯಾರಿಕೇಡ್ಗಳನ್ನು ಕಿತ್ತುಹಾಕಿ ನುಗ್ಗಲು ಯತ್ನಿಸಿದರು. ಪೊಲೀಸರು ಜಲಫಿರಂಗಿ ಪ್ರಯೋಗಿ ಸಿದರು. ಐದಕ್ಕೂ ಹೆಚ್ಚು ಬಾರಿ ಜಲಫಿರಂಗಿ ಬಳಸಿದರೂ ಪರಿಸ್ಥಿತಿ ತಿಳಿಯಾಗಲಿಲ್ಲ. ಇದರಿಂದಾಗಿ ಪೊಲೀಸರು ಅಶ್ರುವಾಯು ಪ್ರಯೋಗಿಸಿ ದರು.
ಆದರೂ ಕಾರ್ಯಕರ್ತರು ಪೊಲೀಸರತ್ತ ಕಲ್ಲೆಸೆದಿದ್ದು, ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿತು. ಪೊಲೀಸರು ಲಾಠಿ ಪ್ರಹಾರ ನಡೆಸಿ ದ್ದರಿಂದ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ಕುಮಾರ್ ಸೇರಿ ಹಲವು ಕಾರ್ಯಕರ್ತರು ಗಾಯಗೊಂಡರು.
ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಹೈಕೋರ್ಟ್ ಆದೇಶ ನೀಡಿದ್ದರೂ, ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಪ್ರಕರಣದ ಇದುವರೆಗಿನ ತನಿಖಾ ವರದಿಯನ್ನು ಸಿಬಿಐಗೆ ಹಸ್ತಾಂತರಿಸಿಲ್ಲ ಎಂದು ಆರೋಪಿಸಿ, ಯುವ ಕಾಂಗ್ರೆಸ್ ಪ್ರತಿಭಟನೆ
ಹಮ್ಮಿಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.