ಚನ್ನಗಿರಿ: ತಾಲ್ಲೂಕಿನಲ್ಲಿ ಯಾವುದೇ ಜಾತಿಮತ ಭೇದ ಇಲ್ಲದೇ ಎಲ್ಲಾ ವರ್ಗಗಳ ಅಭಿವೃದ್ಧಿಗೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಗ್ರಾಮಗಳ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಬೆರೆಸಬೇಡಿ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲಹೆ ನೀಡಿದರು.
ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಸುವರ್ಣ ಗ್ರಾಮ 1ನೇ ಹಂತದ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಉಪ್ಪಾರ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಈ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗೆ ರೂ 60 ಲಕ್ಷ, ಕುಡಿಯುವ ನೀರಿನ ಕಾಮಗಾರಿಗೆ ರೂ 14 ಲಕ್ಷ, ಸಮುದಾಯ ಭವನಕ್ಕೆ ರೂ 25 ಲಕ್ಷ ಹಾಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ 3 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದರಿಂದ ಬಡ ಕಾರ್ಮಿಕರಿಗೆ ಸಾಕಷ್ಟು ಕೆಲಸಗಳು ಸಿಕ್ಕಿವೆ. ಈ ಗ್ರಾಮಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸಲಾಗುವುದು ಎಂದರು.
ಜಿ.ಪಂ. ಸದಸ್ಯೆ ಪ್ರೇಮಾ ಲೋಕೇಶ್, ತಾ.ಪಂ. ಇಒ ಬಿ.ಇ. ಶಿವಕುಮಾರ್, ಗ್ರಾಮದ ಮುಖಂಡರಾದ ಯು. ಶಿವನಪ್ಪ, ಎಚ್. ಕೃಷ್ಣಪ್ಪ, ಜಿ.ಬಿ. ಹಾಲೇಶ್, ಸಾದಿಕ್, ಸತ್ತಾರ್ಸಾಬ್, ಎನ್.ಬಿ. ಅನಿಲ್, ಕೆ.ಆರ್. ವಿಜಯ್ ಮುಂತಾದವರು ಉಪಸ್ಥಿತರಿದ್ದರು.
ಗ್ರಾ.ಪಂ. ಅಧ್ಯಕ್ಷೆ ಶ್ವೇತಾ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ್ ಪ್ರಾರ್ಥಿಸಿದರು. ಎನ್. ಚಂದ್ರಶೇಖರಪ್ಪ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.