ಹೊನ್ನಾಳಿ: `ಕಬ್ಬಿಣಾಂಶ ಮಾತ್ರೆಗಳ ಸೇವನೆಯಿಂದ ರಕ್ತಹೀನತೆ ತಡೆಗಟ್ಟಬಹುದು' ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶೀಲಾ ಗದ್ದಿಗೇಶ್ ಹೇಳಿದರು.
ಪಟ್ಟಣದ ಟಿ.ಬಿ.ವೃತ್ತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕಬ್ಬಿಣಾಂಶ ಮಾತ್ರೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಬ್ಬಿಣಾಂಶದ ಕೊರತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ಸರ್ಕಾರ ಎಲ್ಲಾ ಮಕ್ಕಳಿಗೂ ಉಚಿತವಾಗಿ ಕಬ್ಬಿಣಾಂಶದ ಮಾತ್ರೆಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಮಾತ್ರೆಗಳ ಸೇವನೆಯಿಂದ ಯಾವುದೇ ದುಷ್ಪರಿಣಾಮ ಆಗುವುದಿಲ್ಲ ಎಂದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ಕೆಂಚಪ್ಪ ಆರ್.ಬಂತಿ ಮಾತನಾಡಿ, `ವಿದ್ಯಾರ್ಥಿಗಳು ಊಟದ ನಂತರ ಕಬ್ಬಿಣಾಂಶದ ಮಾತ್ರೆಗಳನ್ನು ಸೇವಿಸಬೇಕು. ಊಟದ ಮೊದಲು ಸೇವಿಸಿದರೆ ವಾಂತಿ, ಎದೆ ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ, ಊಟದ ನಂತರ ಮಾತ್ರೆ ಸೇವಿಸಬೇಕು' ಎಂದು ಸಲಹೆ ನೀಡಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭರ್ಮಪ್ಪ ಮೈಸೂರು, ಸಿಡಿಪಿಒ ರಾಮಲಿಂಗಪ್ಪ ಅರಳಗುಪ್ಪಿ ಮಾತನಾಡಿದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪ್ರಭಾವತಿ ಜುಂಜಾನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಿರಂಜನಮೂರ್ತಿ, ಪ್ರಕಾಶ್, ಶಿವಯೋಗಿ ಇದ್ದರು. ಮುಖ್ಯ ಶಿಕ್ಷಕ ಎಂ.ರುದ್ರಯ್ಯ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ಮಲ್ಲಿಕಾರ್ಜುನ್ ಪ್ರಾಸ್ತಾವಿಕ ಮಾತನಾಡಿದರು. ಎ.ಕೆ.ಚನ್ನೇಶ್ವರ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.