ADVERTISEMENT

ಕುಡಿಯುವ ನೀರು ಪೂರೈಕೆಗೆ ಕ್ರಮ: ಸಚಿವ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 6:20 IST
Last Updated 13 ಮಾರ್ಚ್ 2012, 6:20 IST

ಹೊನ್ನಾಳಿ: ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ತಾಲ್ಲೂಕಿಗೆ ಒಟ್ಟು ರೂ.1.50 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನ 70 ಹಳ್ಳಿಗಳಲ್ಲಿ ಕುಡಿಯುವ ನೀರು ಪೈಪ್‌ಲೈನ್ ಅಳವಡಿಕೆ ಮತ್ತು ಕೊಳವೆ ಬಾವಿಗಳಿಗೆ ಮೋಟಾರ್ ಅಳವಡಿಕೆ ಕಾಮಗಾರಿಗೆ ಈ ಹಣ ಬಳಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರ ಸಹಕಾರದಿಂದ ಈ ಹಣ ಮಂಜೂರಾಗಿದೆ ಎಂದು ಅವರು ತಿಳಿಸಿದರು.

ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಪೈಪ್‌ಲೈನ್ ಅಳವಡಿಕೆಗೆ ರೂ. 4ಲಕ್ಷ, ನ್ಯಾಮತಿಗೆ ರೂ.  7ಲಕ್ಷ, ಬಸವನಹಳ್ಳಿಗೆ ರೂ.3.50ಲಕ್ಷ, ಹೊಳೆ ಅರಳಹಳ್ಳಿಗೆ ಮೋಟಾರ್ ಮತ್ತು ಪೈಪ್‌ಲೈನ್ ಅಳವಡಿಕೆಗೆ ರೂ.5.70ಲಕ್ಷ, ಯರೇಚಿಕ್ಕನಹಳ್ಳಿಗೆ ರೂ.5 ಲಕ್ಷ ಸೇರಿದಂತೆ ಇತರ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಹಣ ಬಳಸಲಾಗುವುದು ಎಂದರು.

ಕುಡಿಯುವ ನೀರು ಪೂರೈಕೆ ಮೇಲ್ತೊಟ್ಟಿ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ರೂ.  3.50 ಕೋಟಿ ವ್ಯಯಿಸಲಾಗುತ್ತಿದೆ. ಈ ಪೈಕಿ ಶೇ. 60ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮಾರ್ಚ್ 31ರ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಬರಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರೂ.   55ಲಕ್ಷ ಹಣ ಬಿಡುಗಡೆಯಾಗಿದೆ. ಒಟ್ಟು ರೂ. 5.55 ಕೋಟಿ ವೆಚ್ಚದಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಹಣ ವ್ಯಯಿಸಿ ಕಾಮಗಾರಿ ಪೂರ್ಣಗೊಂಡರೆ ಶೇ. 90ರಷ್ಟು ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದರು.

ತಾಲ್ಲೂಕಿನ ರಸ್ತೆಗಳ ದುರಸ್ತಿಗೆ ರೂ.27.50 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ನುಡಿದರು.

ತಹಶೀಲ್ದಾರ್ ಎ.ಎಂ. ಶೈಲಜಾ ಪ್ರಿಯದರ್ಶಿನಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಆಲ್ಬರ್ಟ್, ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಕೆ.ಸಿ. ಮಲ್ಲಿಕಾರ್ಜುನ್, ಎಂಜಿನಿಯರ್ ತಿಮ್ಮಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹಾಂತೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.