ADVERTISEMENT

ಖಾತ್ರಿ ಅವ್ಯವಹಾರ: 7 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2012, 3:50 IST
Last Updated 22 ಅಕ್ಟೋಬರ್ 2012, 3:50 IST

ಜಗಳೂರು: ಉದ್ಯೋಗ ಖಾತ್ರಿ ಯೋಜನೆ ಅಡಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿ 2011-12ನೇ ಸಾಲಿನಲ್ಲಿ ಕೈಗೊಳ್ಳಲಾದ ಚೆಕ್‌ಡ್ಯಾಂ, ಏರಿ ನಿರ್ಮಾಣ, ಕೆರೆ ಹೂಳು ತೆಗೆಯುವುದು ಹಾಗೂ  ರಸ್ತೆ ಬದಿ ನೆಡುತೋಪು ಸೇರಿದಂತೆ ್ಙ 2 ಕೋಟಿ ವೆಚ್ಚದ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ತಾಲ್ಲೂಕು ಪಂಚಾಯ್ತಿ ಪ್ರಭಾರ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ಸಿದ್ದಪ್ಪ ಅವರು ಇಲ್ಲಿನ ಠಾಣೆಗೆ ಶನಿವಾರ ರಾತ್ರಿ ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಪಿಡಿಒ ರುದ್ರಪ್ಪ, ಪಿಆರ್‌ಇಡಿ ಇಲಾಖೆಯ ಕಿರಿಯ ಎಂಜಿನಿಯರ್ ಹನುಮಂತಪ್ಪ, ಈ ಹಿಂದೆ ಪಂಚಾಯ್ತಿಯಲ್ಲಿ ಪಿಡಿಒ ಹಾಗೂ ಕಾರ್ಯದರ್ಶಿಯಾಗಿದ್ದ ಮಲ್ಲಿಕಾರ್ಜುನ, ರಾಜಪ್ಪ, ವಲಯ ಅರಣ್ಯಾಧಿಕಾರಿ ಮತ್ತು ವನಪಾಲಕ ಸೇರಿ 7 ಜನರ ವಿರುದ್ಧ ವಂಚನೆ, ಪೋರ್ಜರಿ, ವಿಶ್ವಾಸ ದ್ರೋಹ (ಐಪಿಸಿ ಸೆಕ್ಷನ್ 409, 420, 271, 417)ದ ಆರೋಪದ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಅಖಿಲ ಭಾರತ ಕಿಸಾನ್ ಸಭಾ ಸಂಘಟನೆಯ ದೂರಿನ ಹಿನ್ನೆಲೆಯಲ್ಲಿ ನರೇಗಾ ಯೋಜನೆಯ ರಾಜ್ಯ ಜಂಟಿ ನಿರ್ದೇಶಕ ಟಿ. ವೆಂಕಟೇಶ್ ಹಾಗೂ ಸಹ ನಿರ್ದೇಶಕ ನಾಗರಾಜ್ ಅವರು ಕಳೆದ ತಿಂಗಳು ಎರಡು ದಿನಗಳ ಕಾಲ ಕಾಮಗಾರಿಗಳ ವಿವರವಾದ ಪರಿಶೀಲನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಪಂಚಾಯ್ತಿ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಸರ್ಕಾರಕ್ಕೆ ನೀಡಿದ ವರದಿಯಲ್ಲಿ ಶಿಫಾರಸು ಮಾಡಿದ್ದರು.

ವರದಿಯಲ್ಲಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಭುಸ್ವಾಮಿ  ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭುಸ್ವಾಮಿ ಅವರನ್ನು ಜಿಲ್ಲಾ ಪಂಚಾಯ್ತಿ ಸಿಇಒ ಅವರು ಒತ್ತಾಯಪೂರ್ವಕವಾಗಿ ಅನಿರ್ದಿಷ್ಟ ಅವಧಿಯವರೆಗೆ ರಜೆ ಮೇಲೆ ಕಳುಹಿಸಿದ್ದಾರೆ. ಬಿಇಒ ಸಿದ್ದಪ್ಪ ಅವರಿಗೆ ಇಒ ಆಗಿ ಹೆಚ್ಚುವರಿ ಅಧಿಕಾರ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT