ದಾವಣಗೆರೆ: ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು, ಆಯಾ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಮುಖಂಡರು ಜಿಲ್ಲೆಗೆ ಲಗ್ಗೆ ಇಡುತ್ತಿದ್ದಾರೆ.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹರಪನಹಳ್ಳಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಮೇ 5ರಂದು ಮಧ್ಯಾಹ್ನ 1ಕ್ಕೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ಎನ್. ಕೊಟ್ರೇಶ್ ಪರ ಮತಯಾಚಿಸುವರು.
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಜೆ 5ಕ್ಕೆ ರೋಡ್ ಷೋ ನಡೆಸಿ, ಶಾಸಕ ಶಾಮನೂರು ಶಿವಶಂಕರಪ್ಪ ಪರ ಪ್ರಚಾರ ನಡೆಸುವರು.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಹರಿಹರಕ್ಕೆ ಏ. 5ರಂದು ಮಧ್ಯಾಹ್ನ 12.10ಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಿ.ಪಿ. ಹರೀಶ್ ಅವರ ಪರ ಪ್ರಚಾರ ಭಾಷಣ ಮಾಡಲಿದ್ದಾರೆ.
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಜಗಳೂರಿನಲ್ಲಿ ಸಂಜೆ 5ಕ್ಕೆ, ಮಾಯಕೊಂಡ ಕ್ಷೇತ್ರದ ಬಾಡಾದಲ್ಲಿ ಸಂಜೆ 6.15ಕ್ಕೆ, ದಾವಣಗೆರೆ ಉತ್ತರ ಕ್ಷೇತ್ರದ ಶಾಮನೂರಿನಲ್ಲಿ ರಾತ್ರಿ 7.30ಕ್ಕೆ, ದಾವಣಗೆರೆ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ರಾತ್ರಿ 8.30ಕ್ಕೆ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು.
ನಾಳೆ ಚನ್ನಗಿರಿಗೆ ನಿತೀಶ್ ಪ್ರಚಾರ
ಮೇ 6ರಂದು ಸಂಜೆ 5ಕ್ಕೆ ಚನ್ನಗಿರಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಸಮಾವೇಶದಲ್ಲಿ ಜೆಡಿಯು ಅಭ್ಯರ್ಥಿ ಮಹಿಮ ಪಟೇಲ್ ಹಾಗೂ ಮಾಯಕೊಂಡದ ಅಭ್ಯರ್ಥಿ ಬಸವರಾಜನಾಯ್ಕ ಪರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಚಾರ ಕೈಗೊಳ್ಳುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.