ಹರಪನಹಳ್ಳಿ: ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ಸೇರ್ಪಡೆಗೊಂಡರೆ 371 ‘ಜೆ’ ಅಡಿ ಸೌಲಭ್ಯಗಳು ದೊರೆಯಲಿವೆಯೇ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಬಿಡುಗಡೆ ಮಾಡಬೇಕು. ಜನರಲ್ಲಿ ಮೂಡಿರುವ ಗೊಂದಲಗಳನ್ನು ನಿವಾರಿಸಬೇಕು ಎಂದು ಮಾಜಿ ಸಚಿವ ಜಿ.ಕರುಣಾಕರರೆಡ್ಡಿ ಒತ್ತಾಯಿಸಿದರು.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಶುಕ್ರವಾರ ಮನೆ ಮನೆಗೆ ತೆರಳಿ ಮುಷ್ಟಿ ಅಕ್ಕಿ ಸಂಗ್ರಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹರಪನಹಳ್ಳಿಯನ್ನು ಬಳ್ಳಾರಿ ಜಿಲ್ಲೆಗೆ ಸೇರಿಸುವ ಕ್ರಮ ಸ್ವಾಗತಾರ್ಹ. 371 ‘ಜೆ’ ಕಲಂ ಸೌಲಭ್ಯ ಪಡೆಯುವ ಉದ್ದೇಶದಿಂದ ಬಳ್ಳಾರಿಗೆ ಸೇರಿಸಿರುವುದಾಗಿ ಜನಪ್ರತಿನಿಧಿಗಳು ಹೇಳುತ್ತಿದ್ದಾರೆ. ಆದರೆ, ಈ ಕೆಲಸವನ್ನು ಸರ್ಕಾರ 6 ತಿಂಗಳ ಹಿಂದೆಯೇ ಮಾಡಬೇಕಿತ್ತು. ಚುನಾವಣೆ ಸಂದರ್ಭದಲ್ಲಿ ಇಂಥ ನಿರ್ಧಾರ ತೆಗೆದುಕೊಂಡಿದೆ. ತಕ್ಷಣವೇ ಸೇರ್ಪಡೆ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದರು.
‘22 ವರ್ಷಗಳಿಂದ ನಾನು ಬಿಜೆಪಿಯಲ್ಲಿದ್ದೇನೆ. ಸಂಸದ, ಸಚಿವ, ಶಾಸಕನಾಗಿ ಪಕ್ಷಕ್ಕಾಗಿ ಹಗಲಿರುಳು ದುಡಿದ್ದೇನೆ. ಹೀಗಾಗಿ ಮುಂದಿನ ಚುನಾವಣೆಯ ಟಿಕೆಟ್ ನನಗೇ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಲಕ್ಷ್ಮಣ್, ಉಪಾಧ್ಯಕ್ಷ ಕಣವಿಹಳ್ಳಿ ಮಂಜುನಾಥ್, ಪುರಸಭೆ ಅಧ್ಯಕ್ಷ ಎಚ್.ಕೆ. ಹಾಲೇಶ್, ಉಪಾಧ್ಯಕ್ಷ ಸತ್ಯನಾರಾಯಣ, ಮುಖಂಡರಾದ ಎಂ.ಪಿ. ನಾಯ್ಕ, ಬಾಗಳಿ ಕೊಟ್ರೇಶಪ್ಪ, ಬಿ. ಮಹಬೂಬ್ಸಾಬ್, ಕರೇಗೌಡ, ಭಂಗಿ ಕೆಂಚಪ್ಪ, ಜಯಲಕ್ಷ್ಮಿ,
ನಾಗರಾಜ್, ರೆಡ್ಡಿ ಸಿದ್ದಪ್ಪ, ಪ್ರಸನ್ನ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.