ADVERTISEMENT

ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಅಡ್ಡಗಾಲು: ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 28 ಜನವರಿ 2012, 5:45 IST
Last Updated 28 ಜನವರಿ 2012, 5:45 IST

ಜಗಳೂರು: ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಒತ್ತಾಯಿಸಿ ಜ. 30ರಂದು ನಡೆಯುತ್ತಿರುವ `ಪಟ್ಟಣ ಬಂದ್~ ಕರೆಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ ಹೇಳಿದರು.

ಅತ್ಯಂತ ಹಿಂದುಳಿದ ತಾಲ್ಲೂಕಿಗೆ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿ.ಪಂ. ಸದಸ್ಯ ಕೆ.ಪಿ. ಪಾಲಯ್ಯ ಮಾತನಾಡಿ, ತಾಲ್ಲೂಕಿಗೆ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಜಾರಿಯಾಗದಂತೆ ಕೆಲವು ಶಕ್ತಿಗಳು ಅಡ್ಡಗಾಲು ಹಾಕುತ್ತಿವೆ. ಅದು ಯಾವ ಶಕ್ತಿ ಎಂದು ಶಾಸಕ ಎಸ್.ವಿ. ರಾಮಚಂದ್ರ ಅವರಿಗೆ ತಿಳಿದಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಎಚ್.ಪಿ. ರಾಜೇಶ್, ಶಾಸಕರು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿ. ಕಳೆದ 6 ತಿಂಗಳಿಂದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಹೋರಾಟ ಸಮಿತಿಗೆ ಅವಕಾಶ ದೊರೆತಿಲ್ಲ ಎಂದರು.

`ಸಂಸತ್ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ತಾಲ್ಲೂಕಿನ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ನೀರಾವರಿಗಾಗಿ 4 ವರ್ಷದಿಂದ ಹೋರಾಟ ನಡೆಯುತ್ತಿದೆ. ಆದರೆ, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ದೂರಿದರು.

ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ತೋರಣಗಟ್ಟೆ ತಿಪ್ಪೇಸ್ವಾಮಿ, ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಸವರಾಜ್ ಬಾಬು, ಜಿ.ಪಂ. ಮಾಜಿ ಸದಸ್ಯ ಎಸ್.ಕೆ. ರಾಮರೆಡ್ಡಿ, ಪ್ರಕಾಶ್ ರೆಡ್ಡಿ, ಗಿರೀಶ್ ಒಡೆಯರ್, ವೆಂಕಟೇಶ ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.