ADVERTISEMENT

ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ: ಆರೋಪ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2012, 5:55 IST
Last Updated 6 ಅಕ್ಟೋಬರ್ 2012, 5:55 IST

ದಾವಣಗೆರೆ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಚಟ್ನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ವಿವಿಧ ವಸತಿ ಯೋಜನೆಯ ಅಡಿ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಯುವ ಜನಶಕ್ತಿ ವೇದಿಕೆ ಜಿಲ್ಲಾ ಘಟಕ ಆರೋಪಿಸಿದೆ.

ಅರ್ಹರಿಗೆ ಸಿಗಬೇಕಾದ ಸೌಲಭ್ಯ, ಅನರ್ಹರ ಪಾಲಾಗಿದೆ. ಶ್ರೀಮಂತರು ಹಾಗೂ ಈಗಾಗಲೇ ಮನೆ ಇರುವವರಿಗೆ ಮನೆ ನೀಡಲಾಗಿದೆ. ಪ್ರತಿ ಮನೆಗೆ ್ಙ 5 ಸಾವಿರ ಲಂಚ ಪಡೆಯಲಾಗುತ್ತಿದೆ ಎಂದು ವೇದಿಕೆಯ ರಾಜ್ಯ ಘಟಕದ ಉಪಾಧ್ಯಕ್ಷ ಎಚ್. ಶೇಖರ್‌ನಾಯ್ಕ ಹಾಗೂ ಹರಪನಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ವೆಂಕಟೇಶ ನಾಯ್ಕ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ. ಸುರೇಶ್‌ನಾಯ್ಕ ತಮ್ಮ ಸಂಬಂಧಿಕರಿಗೆ ಸೌಲಭ್ಯ ಒದಗಿಸಿದ್ದಾರೆ. ವಿವಿಧ ವಸತಿ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿ ಹಾಗೂ ಮನೆ ನಿರ್ಮಿಸಿಕೊಟ್ಟ ವಿವರ ನೀಡವಂತೆ ಮಾಹಿತಿ ಹಕ್ಕು  ಕಾಯ್ದೆಯಡಿ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ, 2009ರಲ್ಲಿ ಕೈಗೊಂಡ ಕಾಮಗಾರಿಯ  ಬಗ್ಗೆ ಮಾಹಿತಿ ನೀಡಲಾಗಿದೆಯೇ ಹೊರತು, ನಂತರದ್ದು ಕೊಡುತ್ತಿಲ್ಲ. ಇದರಿಂದ ಅವ್ಯವಹಾರ ನಡೆದಿರುವುದು ಗೊತ್ತಾಗುತ್ತಿದೆ. ಈ ಬಗ್ಗೆ ತಾಲ್ಲೂಕು ಪಂಚಾಯ್ತಿ ಇಒ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಗ್ರಾಮ ಪಂಚಾಯ್ತಿ ಸಿಬ್ಬಂದಿ, 15 ದಿನಗಳ ಒಳಗೆ ನಾವು ಕೋರಿರುವ ಮಾಹಿತಿ ನೀಡಬೇಕು ಹಾಗೂ ಅರ್ಹರಿಗೆ ಮನೆಗಳ ಸೌಲಭ್ಯ ಒದಗಿಸಬೇಕು. ಇಲ್ಲವಾದಲ್ಲಿ ಸತ್ಯಾಗ್ರಹ ನಡೆಸಲಾಗುವುದು ಎಂದರು.
ಮುಖಂಡರಾದ ಟಿ. ಶೇಖರ್‌ನಾಯ್ಕ ಹಾಗೂ ಬಿ. ಗಂಗ್ಯಾನಾಯ್ಕ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.