ADVERTISEMENT

ಮೀಸಲಾತಿ ಹೋರಾಟ ಬೆಂಬಲಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2012, 8:00 IST
Last Updated 11 ಜನವರಿ 2012, 8:00 IST

ದಾವಣಗೆರೆ:  ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 7.5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಲ್.ಜಿ. ಹಾವನೂರು ನಾಯಕರ ಹೋರಾಟ ಸಮಿತಿ ನಡೆಸುತ್ತಿರುವ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಎಲ್.ಜಿ. ಹಾವನೂರ್ ಆಟೋರಿಕ್ಷಾ ಚಾಲಕರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಆಟೋರಿಕ್ಷಾ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆ ನಡೆಸುತ್ತಿರುವುದು ಯಾವುದೇ ಧರ್ಮ, ಜಾತಿ ವಿರುದ್ಧವಲ್ಲ. ಸಂವಿಧಾನಬದ್ಧವಾಗಿ ನೀಡಬೇಕಾದ ಸೌಲಭ್ಯ ನೀಡಬೇಕು ಎಂಬ ಉದ್ದೇಶ. ನಾಯಕ ಸಮಾಜಕ್ಕೆ ರಾಜಕೀಯ ಕ್ಷೇತ್ರದಂತೆ ಶಿಕ್ಷಣ, ಉದ್ಯೋಗದಲ್ಲಿಯೂ ಶೇ.7.5 ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕದ ವಿವಿಧೆಡೆ ಪ್ರತಿಭಟನೆ ನಡೆಯುತ್ತಿದೆಯಾದರೂ ರಾಜ್ಯ ಸರ್ಕಾರ ಜಾಣಕುರುಡು ಪ್ರದರ್ಶಿಸುತ್ತಿದೆ.

ಇದು ಖಂಡನೀಯ. ಶಿಕ್ಷಣ, ಉದ್ಯೋಗದಲ್ಲಿ ಶೇ. 3ರಷ್ಟು ಇರುವ ಮೀಸಲಾತಿಯನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕೇಂದ್ರ ಸರ್ಕಾರ ರಾಜಕೀಯ, ಆರ್ಥಿಕ, ಉದ್ಯೋಗ, ಶಿಕ್ಷಣ ಮೀಸಲಾತಿ ಘೋಷಿಸಿದ್ದು, ಇದೇ ಮಾದರಿಯಲ್ಲಿ ಮೀಸಲಾತಿ ನಿಗದಿಪಡಿಸ ಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹುಚ್ಚವ್ವನಹಳ್ಳಿ ಮಂಜುನಾಥ್, ಆವರಗೆರೆ ಬಸವರಾಜ್, ರಾಮ ನಗರ ಅಂಜು, ಪಾಮೇನಹಳ್ಳಿ ನಾಗರಾಜ್, ತುರ್ಚಘಟ್ಟ ರಮೇಶ್, ಅಜ್ಜಯ್ಯ, ಜಯರಾಂ ರಾಮನಗರ, ವಸಂತಕುಮಾರ್, ಫಣಿಯಾಪುರ ನಿಂಗರಾಜ್, ಗೂಳಿ ರಮೇಶ್ ಮತ್ತಿತರರು ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.