ADVERTISEMENT

ಮೇವು ಕೊರತೆ ನೀಗಿಸಲು ಕ್ರಮ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2012, 8:30 IST
Last Updated 10 ಫೆಬ್ರುವರಿ 2012, 8:30 IST

ಜಗಳೂರು: ತಾಲ್ಲೂಕಿನ ಹನುಮಂತಾಪುರ, ತಮಲೇಹಳ್ಳಿ, ಚಿಕ್ಕಮಲ್ಲನಹೊಳೆ, ಮರಿಕುಂಟೆ ಕಮಲಾಪುರ ಸೇರಿದಂತೆ 54 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಎಇಇ ಎನ್. ಲಿಂಗರಾಜ್ ಹೇಳಿದರು.

ಪಟ್ಟಣದಲ್ಲಿ ಈಚೆಗೆ ನಡೆದ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಸಮಸ್ಯಾತ್ಮಕ ಗ್ರಾಮಗಳಲ್ಲಿ ಕೊಳವೆಬಾವಿ ಹಾಗೂ ಪೈಪ್‌ಲೈನ್ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದ್ದು, ್ಙ 1.10 ಕೋಟಿ ವೆಚ್ಚದ ಕ್ರಿಯಾಯೋಜನೆಯನ್ನು ಜಿಲ್ಲಾ ಪಂಚಾಯ್ತಿಗೆ ಸಲ್ಲಿಸಲಾಗಿದೆ.
 
್ಙ 20 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆಯ 10 ತುರ್ತು ಕಾಮಗಾರಿಗಳನ್ನು ನಿರ್ವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ತಾಲ್ಲೂಕಿನಲ್ಲಿ 9,600 ಮೆಟ್ರಿಕ್ ಟನ್ ಮೇವಿನ ದಾಸ್ತಾನು ಇದ್ದು, ಮುಂದಿನ 14 ವಾರದವರೆಗೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೇಶವಮೂರ್ತಿ ಹೇಳಿದರು.

ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾದಲ್ಲಿ ತಾಲ್ಲೂಕಿನ ಕೊಣಚೆಕಲ್ ಗುಡ್ಡ, ಅಣಬೂರು ಹಾಗೂ ಗುರುಸಿದ್ದಾಪುರದಲ್ಲಿ ಗೋಶಾಲೆ ಪ್ರಾರಂಭಿಸಲು ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಮೇವಿನ ಬೀಜ ಪೂರೈಕೆ ಹಾಗೂ ಅರಣ್ಯದಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳಲಾಗಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗ ಹರಡದಂತೆ ಎಲ್ಲಾ ಗ್ರಾಮಗಳಿಗೆ ತೆರಳಿ ಲಸಿಕೆ ಹಾಕಲಾಗಿದೆ ಎಂದು ಅವರು ತಿಳಿಸಿದರು.

ಕೆಲವೆಡೆ ಶಾಲೆಗಳಲ್ಲಿ ಶಿಕ್ಷಕರು ಸಮರ್ಪಕವಾಗಿ ಶಾಲೆಗೆ ಹಾಜರಾಗುತ್ತಿಲ್ಲ. ಮಕ್ಕಳಿಗೆ ಪಾಠಪ್ರವಚನಗಳಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ತಾ.ಪಂ. ಸದಸ್ಯರಾದ ಬಸವರಾಜ್, ಸುಮಲತಾ ಆಕ್ಷೇಪ ವ್ಯಕ್ತಪಡಿಸಿದರು.
ಶಾಲಾ ಕಟ್ಟಡಗಳ ಗುಣಮಟ್ಟ ತೃಪ್ತಿದಾಯಕವಾಗಿರುವುದಿಲ್ಲ ಎಂದು ಸದಸ್ಯ ಶ್ರೀನಿವಾಸ್ ಆರೋಪಿಸಿದರು.
ಕೃಷಿ ಇಲಾಖೆಯಲ್ಲಿ ಶೇ. 70ರಷ್ಟು ಹುದ್ದೆಗಳು ಖಾಲಿಯಾಗಿದ್ದು, ಅಗತ್ಯ ಕೆಲಸ ನಿರ್ವಹಿಸಲು ಸಮಸ್ಯೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್. ಮಾರುತಿ ಹೇಳಿದರು.

ತಾ.ಪಂ. ಅಧ್ಯಕ್ಷ ಶಾಂತವೀರಪ್ಪ, ಉಪಾಧ್ಯಕ್ಷೆ ಸುಮಾ ಸಿದ್ದಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಡಿ.ಎಂ. ಪ್ರಭುಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.