ದಾವಣಗೆರೆ: ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಶಾಂತಿಪುರ ಗ್ರಾಮದಲ್ಲಿ ವಾಲ್ಮೀಕಿ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ನಗರದ ವಾಲ್ಮೀಕಿ ಯುವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ವಾಲ್ಮೀಕಿ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ದಾವಣಗೆರೆ ನಗರದಲ್ಲಿಯೂ ವಾಲ್ಮೀಕಿ ಪ್ರತಿಮೆ ನಿರ್ಮಿಸಬೇಕು. ವಾಲ್ಮೀಕಿ ನಗರ ನಿರ್ಮಿಸಬೇಕು. ರಸ್ತೆಗೂ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕು. ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯವೂ ಸರ್ಕಾರವೂ ಸಹ ಶಿಕ್ಷಣ ಮತ್ತು ಉದ್ಯೋಗಕ್ಕೆ ಶೇ 7.5 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರವು ಪ್ರತಿ ವರ್ಷ ವಾಲ್ಮೀಕಿ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ವಾಲ್ಮೀಕಿ ಉತ್ಸವವನ್ನು ಅದ್ದೂರಿಯಾಗಿ ನೆರವೇರಿಸಬೇಕು. ವಿಳಂಬವಾಗಿರುವ ವಿದ್ಯಾರ್ಥಿವೇತನವನ್ನು ಕೂಡಲೇ ವಿತರಿಸಬೇಕು.
ಪರೀಕ್ಷೆಯಲ್ಲಿ ಶೇ 60-65ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು. ರಾಜ್ಯದ ಪ್ರತಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಾಯಕ ಸಮುದಾಯಕ್ಕೆ ಪ್ರತ್ಯೇಕ ವಸತಿನಿಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ನಗರದ ಜಯದೇವ ವೃತ್ತದಿಂದ ಮೆರವಣಿಗೆ ಮೂಲಕ ಗಾಂಧಿವೃತ್ತಕ್ಕೆ ಬಂದು ಘೋಷಣೆ ಕೂಗಿದರು. ನಂತರ ಪಿಬಿ ರಸ್ತೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ವೇದಿಕೆ ಅಧ್ಯಕ್ಷ ರಾಘು ದೊಡ್ಡಮನಿ, ಮುಖಂಡರಾದ ಆವರಗೆರೆ ಬಸವರಾಜ್, ಗುಮ್ಮನೂರು ಪ್ರದೀಪ್, ದೇವರಮನಿ ಗೋಪಾಲ್, ಪರಶುರಾಂ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.