ಜಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಆಟೋಚಾಲಕ ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಈಚೆಗೆ ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ತಹಶೀಲ್ದಾರ್ ಕಚೇರಿಗೆ ತೆರಳಿ ಶಾಸಕ ಎಸ್.ವಿ. ರಾಮಚಂದ್ರ ಹಾಗೂ ತಹಶೀಲ್ದಾರ್ ಎಚ್.ಪಿ. ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದಲ್ಲಿ ಆಟೋ ಚಾಲಕರಿಗೆ ನಿವೇಶನ ನೀಡಬೇಕು. ಆಶ್ರಯ ಮತ್ತು ಇತರೆ ವಸತಿ ಯೋಜನೆಗಳಲ್ಲಿ ಮನೆಗಳನ್ನು ಮಂಜೂರು ಮಾಡಬೇಕು. ಬಿಪಿಎಲ್ ಪಡಿತರ ಚೀಟಿ ವಿತರಿಸಬೇಕು.ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಆಟೋ ಚಾಲಕರಿಗೆ ರಿಯಾಯ್ತಿ ದರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್, ಗ್ಯಾಸ್ ಸಿಲಿಂಡರ್ಗಳನ್ನು ವಿತರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಶಾಸಕ ಎಸ್.ವಿ. ರಾಮಚಂದ್ರ, ಪಟ್ಟಣದಲ್ಲಿ ನಿವೇಶನದ ಸಮಸ್ಯೆ ಇದ್ದು, ಜಮೀನು ಸ್ವಾಧೀನಪಡಿಸಿಕೊಂಡು ನಿವೇಶನ ನಿರ್ಮಿಸಲಾಗುವುದು. ಆಟೋ ಚಾಲಕರಿಗೆ ನಿವೇಶನ ನೀಡಲಾಗುವುದು. ನಿವೇಶನ ಇರುವವರಿಗೆ ಮನೆ ನಿರ್ಮಿಸಿಕೊಳ್ಳಲುರೂ50 ಸಾವಿರ ಸಹಾಯಧನವನ್ನು ಹಂತಹಂತವಾಗಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಿಐಟಿಯು ಮುಖಂಡರಾದ ಆರ್. ಓಬಳೇಶ್, ಬಿ. ತಿಪ್ಪೇಶ್, ಎಸ್. ವೆಂಕಟೇಶ್, ಪ್ರತಾಪ್, ಮಹಮ್ಮದ ಬಾಷಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.ತಹಶೀಲ್ದಾರ್ ಎಚ್.ಪಿ. ನಾಗರಾಜ್, ತಾ.ಪಂ. ಅಧ್ಯಕ್ಷ ಶಾಂತವೀರಪ್ಪ, ಸದಸ್ಯರಾದ ಬಿ.ಆರ್. ಅಂಜಿನಪ್ಪ, ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.