ಹರಪನಹಳ್ಳಿ: ಹಿಂದುಳಿದ ವರ್ಗ ಹಾಗೂ ಶೋಷಿತ ಸಮುದಾಯಗಳು ಶೋಷಣೆಯಿಂದ ವಿಮೋಚನೆ ಪಡೆಯಲು ಶೈಕ್ಷಣಿಕ ಸಂಸ್ಕಾರ ಒಂದೇ ಏಕೈಕ ಮಾರ್ಗ ಎಂದು ಚಿತ್ರದುರ್ಗ ಗೊಲ್ಲಗಿರಿಯ ಯಾದವ ಸಂಸ್ಥಾನದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
ಸ್ಥಳೀಯ ನಟರಾಜ ಕಲಾಭವನದಲ್ಲಿ ತಾಲ್ಲೂಕು ಯಾದವ ಸಂಘ ಸೋಮವಾರ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತ್ಯುತ್ಸವ ಹಾಗೂ ಸನ್ಮಾನ ಸಮಾರಂಭದ ನೇತೃತ್ವವಹಿಸಿ, ಆಶೀರ್ವಚನ ನೀಡಿ ಅವರು ಮಾತನಾಡಿದರು.
‘ನಮ್ಮ ಅಭಿವೃದ್ಧಿಗೆ ನಾವೇ ಮಾರ್ಗೋಪಾಯ ಕಂಡುಕೊಳ್ಳಬೇಕಿದೆ. ಅದಕ್ಕೆ ಪೂರಕವಾಗಿ ಮೊದಲು ಶಿಕ್ಷಣ ಪಡೆದುಕೊಳ್ಳಬೇಕು. ಜತೆಗೆ ಸಾಂಘಿಕವಾದ ಹೋರಾಟ ರೂಪಿಸಬೇಕಿದೆ. ಆಗದಾಗ ಮಾತ್ರ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯ’ ಎಂದು ಸಲಹೆ ನೀಡಿದರು.
ನಮ್ಮ ಅಸಂಘಟಿತ ಮನೋಧರ್ಮವನ್ನು ಬೇರೆಯವರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.
ರೂ. ೧೦ಕೋಟಿ ವೆಚ್ಚದಲ್ಲಿ ಶಾಲಾ– ಕಾಲೇಜು ಆರಂಭಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಸಹೃದಯಿಗಳು ಶ್ರೀಮಠದ ಕೈಂಕರ್ಯಕ್ಕೆ ಕೈಜೋಡಿಸುವ ಮೂಲಕ ಬಡ ಹಾಗೂ ನಿರ್ಗತಿಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಆಸರೆಯಾಗಬೇಕು ಎಂದು ಆಶಿಸಿದರು.
ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಶಾಸಕ ಎಂ.ಪಿ. ರವೀಂದ್ರ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಆರ್್. ಹನುಮಂತಪ್ಪ, ಗಂಗಾಮತ ಸಮಾಜದ ಅಧ್ಯಕ್ಷ ಕಣವಿಹಳ್ಳಿ ಮಂಜುನಾಥ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎಸ್. ಚಿದಾನಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ. ಹಾಲೇಶ್, ಭೋವಿ ಸಮಾಜದ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಕಾಂಗ್ರೆಸ್ ಪಕ್ಷದ ಮುಖಂಡರಾದ ಟಿ.ಎಚ್.ಎಂ. ವಿರೂಪಾಕ್ಷಯ್ಯ, ಎಚ್.ಬಿ. ಪರಶುರಾಮಪ್ಪ, ತೆಗ್ಗಿನಮಠದ ಕಾರ್ಯದರ್ಶಿ ಟಿ.ಎಂ. ಚಂದ್ರಶೇಖರಯ್ಯ, ಯಾದವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ, ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎನ್. ಮೇಗಳಮನಿ, ಮುಖಂಡರಾದ ಯರಬಾಳು ಗುರುಬಸವನಗೌಡ, ಕುಂಚೂರು ಬಸವರಾಜ, ಕೆ.ಬಿ. ಹನುಮಂತಪ್ಪ, ಇಟ್ಟಿಗುಡಿ ಅಶೋಕ್, ವೈ. ದೇವರಾಜ, ನಿವೃತ್ತ ಪಾ್ರಂಶುಪಾಲ ಬಸವರಾಜಪ್ಪ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವ ಹಾಗೂ ಶಾಸಕರನ್ನು ಮತ್ತು ಎಸ್ಸೆಸ್ಸೆಲ್ಸಿ ಹಾಗೂ ಪಿಯು ತರಗತಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಮಾಜ ವತಿಯಿಂದ ಗೌರವಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.