ಹರಪನಹಳ್ಳಿ: ಕಳೆದ ಎರಡು ತಿಂಗಳ ಹಿಂದೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯ ಕುಟುಂಬದ ಪರವಾಗಿ ವ್ಯಕ್ತಿಯೊಬ್ಬ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಸರ್ಕಾರಿ ವೈದ್ಯ ಕೆ.ಬಿ.ಚನ್ನಬಸಪ್ಪ ಸೋಗಿ ತಿಳಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಷಹನಾಜ್ ಎಂಬ ಮಹಿಳೆ ಸೇರಿದಂತೆ ಹಲವರಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಾಡಲಾಗಿತ್ತು. ರಾಜಕೀಯ ಪಕ್ಷದ ಮುಖಂಡ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ‘ಮಹಿಳೆಯ ಶಸ್ತ್ರಚಿಕಿತ್ಸೆ ವಿಫಲವಾಗಿದೆ. ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಿದ್ದೇನೆ. ಅದರ ವೆಚ್ಚದ ಹಣ ನೀಡುವಂತೆ ಪೀಡಿಸುತ್ತಿದ್ದಾನೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
‘ಚಿಕಿತ್ಸೆ ಪಡೆದ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಪರೀಕ್ಷೆ ನಡೆಸುತ್ತೇನೆ. ಶಸ್ತ್ರಚಿಕಿತ್ಸೆ ವಿಫಲವಾಗಿದ್ದರೆ ಮೇಲಧಿಕಾರಿಗೆ ದೂರು ಸಲ್ಲಿಸಲಿ. ಹಣ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದೇನೆ. ಹೀಗಿದ್ದರೂ ನಿರಂತರವಾದಿ ದೂರವಾಣಿ ಕರೆ ಮಾಡಿ ಬೆದರಿಸುತ್ತಾನೆ. ಇದರಿಂದ ನನಗೆ ಮಾನಸಿಕ ಹಿಂಸೆಯಾಗಿದೆ. ವೈದ್ಯ ವೃತ್ತಿ ಮಾಡಲಿ ಸಾಧ್ಯವಾಗುತ್ತಿಲ್ಲ’ ಎಂದು ಅಳಲು ತೋಡಿಕೊಂಡರು.
‘ಆತ ನನ್ನ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವುದು, ಸುಳ್ಳು ಸುದ್ದಿ ವರದಿ ಮಾಡಿಸಿ ತೇಜೋವಧೆ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.
ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆ ಸಿಬ್ಬಂದಿ ವೆಂಕಟೇಶ್ ಬಾಗಲಾರ
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.