ADVERTISEMENT

ಸಾರ್ವಜನಿಕರಿಗೆ ಸ್ವಚ್ಛತೆ ಅರಿವು ಅಗತ್ಯ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2013, 8:50 IST
Last Updated 18 ಸೆಪ್ಟೆಂಬರ್ 2013, 8:50 IST

ಹರಿಹರ: ಜಿಲ್ಲೆಯಲ್ಲಿ ಡೆಂಗೆ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿರುವ ಪ್ರಸ್ತುತ ದಿನಮಾನಗಳಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿದೇರ್ಶಕ ಜೆ.ಚಂದ್ರಶೇಖರ್ ಅಭಿಪ್ರಾಯಪಟ್ಟರು.

ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಂಗಳವಾರ ನಡೆದ ನಾಗರಿಕ ಪ್ರಜ್ಞೆ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಹಬ್ಬಗಳ ರಜಾ ದಿನಗಳನ್ನು ಪರಿಸರ ಸ್ವಚ್ಛತಾ ಜಾಗೃತಿ ಆಂದೋಲನಕ್ಕೆ ಬಳಸಿಕೊಳ್ಳುವುದರಿಂದ ಸ್ಚಚ್ಛತೆ ಹಾಗೂ ನೈರ್ಮಲೀಕರಣದ ಗ್ರಾಮೀಣ ಜನರಲ್ಲಿ ಅಗತ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು.

2ರಂದು ನಡೆಯಲಿರುವ ಗಾಂಧಿ ಜಯಂತಿಯಂದು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲೂ 1ಲಕ್ಷಕ್ಕಿಂತ ಹೆಚ್ಚು ಕಾರ್ಯಕರ್ತರಿಂದ ಬೃಹತ್ ಸ್ವಚ್ಛತಾ ಆಂದೋಲನ ನಡೆಸಲು ನಿಶ್ಚಯಿಸಿದ್ದೇವೆ. ಆಂದೋಲನದ ಹಿನ್ನೆಲೆಯಲ್ಲಿ ನಾಗರಿಕ ಪ್ರಜ್ಞೆಯ ಸೂತ್ರಗಳು ಎಂಬ ಶೀರ್ಷಿಕೆಯ ಕರಪತ್ರ ಮುದ್ರಿಸಿ ಗ್ರಾಮಾಂತರ ಪ್ರದೇಶಗಳಲ್ಲಿ ವಿತರಣೆ ಮಾಡುವ ವ್ಯವಸ್ಥೆ ಮಾಡಿದ್ದೇವೆ ಎಂದರು. 

ಗ್ರಾಮಾಂತರ ಪ್ರದೇಶಗಳಲ್ಲಿ ಶೌಚಾಲಯಗಳ ಬಗ್ಗೆ ಅರಿವು ಮೂಡಿಸಲು ಬೀದಿ ನಾಟಕ ಹಾಗೂ ಜನಜಾಗೃತಿ ಶಿಬಿರಗಳನ್ನು ನಡೆಸಲು ಯೋಜನೆ ಸಿದ್ಧ ಮಾಡಲಾಗಿದೆ ಎಂದು ಹೇಳಿದರು.

ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಮಾಲಿನಿ ಹೆಗ್ಡೆ ಮಾತನಾಡಿ, 40 ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಇದರ ಬಳಕೆಯಿಂದ ಆಗುವ ಪರಿಸರ ಮಾಲಿನ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು.

ಪರಿಸರ
ಮಲೀನಗಗೊಳಿಸುವ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ವಿಜಯಲತಾ ಕೆ. ರಾಜು, ಉಪಾಧ್ಯಕ್ಷ ಅಣ್ಣೇಶ್ ಐರಣಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಪಕ್ಕೀರಮ್ಮ ಕೊಟ್ರಪ್ಪ, ತಾಲೂಕು ಪಂಚಾಯ್ತಿ ಇಒಡಾ.ಎಸ್.ರಂಗಸ್ವಾಮಿ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಎಚ್.ಎಚ್. ಬಸವರಾಜ್, ಡಿ. ಕುಮಾರ್, ಅರ್ಜ್ಯಾ ನಾಯ್ಕ, ಶಾಂತಾಬಾಯಿ ಕಲ್ಯಾಣಕರ್, ಸರೋಜಮ್ಮ, ಭೀಮಪ್ಪ, ಪಾರ್ವತಮ್ಮ ಹಾಗೂ ಗ್ರಾಮ ಪಂಚಾಯ್ತಿ ಪಿಡಿಒಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.