ADVERTISEMENT

ಸೇವೆ ಕಾಯಂಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 9:26 IST
Last Updated 4 ಏಪ್ರಿಲ್ 2013, 9:26 IST

ಜಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅರಣ್ಯ ಇಲಾಖೆಯ ದಿನಗೂಲಿ  ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.

ಕಳೆದ 25-30 ವರ್ಷಗಳಿಂದ ತಾಲ್ಲೂಕಿನ ಅರಣ್ಯ ಇಲಾಖೆಯಲ್ಲಿ ದಿನಗೂಲಿಯಾಗಿ ಸೇವೆ ಸಲ್ಲಿಸುತ್ತಿದ್ದರೂ ಇದುವರೆಗೆ ಸೇವೆಯನ್ನು ಕಾಯಂಗೊಳಿಸಿಲ್ಲ. ಅರಣ್ಯ  ಪ್ರದೇಶದಲ್ಲಿ ವನ್ಯಜೀವಿ ಹಾಗೂ ಸಸ್ಯ ಸಂಪತ್ತಿನ ಸಂರಕ್ಷಣೆಗಾಗಿ ಜೀವದ ಹಂಗು ತೊರೆದು ಹಗಲು ರಾತ್ರಿ ಎನ್ನದೆ  ಕೆಲಸ ಮಾಡಿದ್ದರೂ ಸೇವೆಯನ್ನು ಕಾಯಂಗೊಳಿಸುತ್ತಿಲ್ಲ ಎಂದು 40ಕ್ಕೂ ಹೆಚ್ಚು ನೌಕಕರು ಆರೋಪಿಸಿದರು.

ಪ್ರಾಮಾಣಿಕ ಸೇವೆಯನ್ನು ಪರಿಗಣಿಸದೆ ಇದುವರೆಗೆ ಕಾರ್ಯ ನಿರ್ವಹಿಸಿದ ಮೇಲಧಿಕಾರಿಗಳು ನಿರ್ಲಕ್ಷ್ಯವಹಿಸುವ ಮೂಲಕ ಬಡ ದಿನಗೂಲಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು. ದಿನಗೂಲಿ ನೌಕರರಿಗೆ ಸರ್ಕಾರದ ಆದೇಶದ ಅನ್ವಯ ಶಿವಮೊಗ್ಗ, ಬಳ್ಳಾರಿ ಹಾಗೂ ಇತರೆ ಜಿಲ್ಲೆಗಳಲ್ಲಿ ್ಙ 1 ಸಾವಿರ ಹೆಚ್ಚುವರಿ ವೇತನ ನೀಡಲಾಗುತ್ತಿದೆ. ಆದರೆ, ತಾಲ್ಲೂಕಿನಲ್ಲಿ ನೀಡುತ್ತಿಲ್ಲ. 25 ವರ್ಷ ಸೇವೆ ಸಲ್ಲಿಸಿದ್ದರೂ ನಮ್ಮ ಸೇವಾ ದಾಖಲೆಗಳು ಲಭ್ಯವಿಲ್ಲ ಎಂದು ಮೇಲಧಿಕಾರಿಗಳು ಸಬೂಬು ಹೇಳುತ್ತಾರೆ. ಸೇವಾ ಭದ್ರತೆ ಇಲ್ಲದೆ ಜೀವನ ನಿರ್ವಹಣೆಗೆ ಕಷ್ಟಪಡುವಂತಾಗಿದೆ ಎಂದು ಅವರು ತಮ್ಮ ಅಳಲು ತೋಡಿಕೊಂಡರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ದಿನಗೂಲಿ ನೌಕರರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ನೌಕರರು ಎಚ್ಚರಿಕೆ ನೀಡಿದರು.ಪ್ರತಿಭಟನಕಾರನ್ನು ಉದ್ದೇಶಿಸಿ ಮಾತನಾಡಿದ ವಲಯ  ಅರಣ್ಯಾಧಿಕಾರಿ ರಾಜಾಸಾಬ್, ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 33 ದಿನಗೂಲಿ ನೌಕಕರರ ಸೇವಾ ವಿವರಗಳನ್ನು ಮೇಲಧಿಕಾರಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು. ದಿನಗೂಲಿ ನೌಕರರಾದ ಅಂಜಿನಪ್ಪ, ಹನುಮಂತಪ್ಪ, ಶಾಂತಕುಮಾರ್, ಓಬಣ್ಣ, ಹೊನ್ನೂರ್ ಸಾಬ್, ನಾಗರಾಜ, ಪಾಲಯ್ಯ ಪ್ರತಿಭಟನೆಯಲ್ಲಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.