ಜಗಳೂರು: ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಬೃಹತ್ ಸಿದ್ಧ ಉಡುಪು ತಯಾರಿಕಾ ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ಪಟ್ಟಣ ಪಂಚಾಯ್ತಿ ಹಾಗೂ ಸ್ವರ್ಣ ಜಯಂತಿ ಷಹರಿ ರೋಜ್ಗಾರ್ ಯೋಜನೆಯ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯಂತ ಹಿಂದುಳಿದ ತಾಲ್ಲೂಕಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಎಲ್ಲಾ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಪಟ್ಟಣದಲ್ಲಿ ಕುಡಿಯುವ ನೀರು, ವಿದ್ಯುತ್ ಹಾಗೂ ದ್ವಿಮುಖ ರಸ್ತೆಗಳನ್ನು ಸುಂದರವಾಗಿ ನಿರ್ಮಿಸಲಾಗಿದೆ. ಪಟ್ಟಣದ ಬಹುತೇಕ ವಾರ್ಡ್ಗಳಲ್ಲಿ ಶೇ. 80ರಷ್ಟು ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದ್ದು, ಉಳಿದ ರಸ್ತೆಗಳ ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು. ಮಾಜಿ ಶಾಸಕ ಟಿ. ಗುರುಸಿದ್ದನಗೌಡ ಅವರು ಪಟ್ಟಣದ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳನ್ನು ಮುಂದುವರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಜಿ.ಪಂ. ಸದಸ್ಯ ನಾಗರಾಜ್ ಮಾತನಾಡಿ, ಮಹಿಳೆಯರು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಮೂಲಕ ಸಂಘಟಿತರಾಗುತ್ತಿರುವುದು ಉತ್ತಮ ಬೆಳವಣಿಗೆ. ಇದರಿಂದ ಆರ್ಥಿಕವಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗಿದೆ. ಶಾಸಕರು ತಾಲ್ಲೂಕಿನಲ್ಲಿ ಸಾಕಷ್ಟು ಮಹಿಳಾ ಪರ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ.ಪಂ. ಅಧ್ಯಕ್ಷೆ ನಾಗರತ್ನಾ ನಾಗಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧಿಕಾರಿ ಜೆ.ಟಿ. ಹನುಮಂತರಾಜು ಪ್ರಾಸ್ತಾವಿಕ ಮಾತನಾಡಿದರು. ಪ.ಪಂ. ಉಪಾಧ್ಯಕ್ಷೆ ಸುಮಾ ನಾಗರಾಜ್, ಸದಸ್ಯ ಜೆ.ವಿ. ನಾಗರಾಜ್, ಬೀಬಿ ಫಾತೀಮಾ, ಶಿವಕುಮಾರ ಸ್ವಾಮಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.