ದಾವಣಗೆರೆ: ರಷ್ಯಾದಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ 110 ವಿದ್ಯಾರ್ಥಿಗಳು ಜುಲೈ 13ರಂದು ಬೆಂಗಳೂರಿಗೆ ಬರಲಿದ್ದು, ಅವರಲ್ಲಿ 11 ಮಂದಿ ಜಿಲ್ಲೆಯವರು ಇದ್ದಾರೆ.
ಕೋವಿಡ್-19ನಿಂದಾಗಿ ತಾಯ್ನಾಡಿಗೆ ಬರಲು ಹಂಬಲಿಸುತ್ತಿದ್ದ ಈ ವಿದ್ಯಾರ್ಥಿಗಳು ಜೂನ್ 30ರಂದು ಟಿಕೆಟ್ ಬುಕ್ ಆಗಿತ್ತು. ಆದರೆ ತಾಂತ್ರಿಕ ಕಾರಣದಿಂದ ವಿಮಾನ ಬರಲು ಆಗಿರಲಿಲ್ಲ. ಬೆಂಗಳೂರಿಗೆ ಬರಲು ಅಗತ್ಯ ವ್ಯವಸ್ಥೆ ಮಾಡಿಕೊಡುವಂತೆ ವಿದ್ಯಾರ್ಥಿಗಳು ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಫೇಸ್ಬುಕ್ ಹಾಗೂ ಟ್ವಿಟರ್ ಮೂಲಕ ಮನವಿ ಮಾಡಿದ್ದರು.
ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಜುಲೈ 1ರಂದು ವಿದೇಶಾಂಗ ಸಚಿವ ಜೈಶಂಕರ್, ವಿಮಾನಯಾನ ಸಚಿವ ಹರದೀಪ್ಸಿಂಗ್ ಪುರಿ ಅವರಿಗೆ ಪತ್ರ ಬರೆದು ಹಾಗೂ ಟ್ವಿಟರ್ ಮೂಲಕ ಗಮನ ಸೆಳೆದಿದ್ದರು.
ಸಂಸದರ ಮನವಿಗೆ ಸ್ಪಂದಿಸಿದ ವಿದೇಶಾಂಗ ಸಚಿವರು ಈ ಎಲ್ಲಾ ವಿದ್ಯಾರ್ಥಿಗಳು ಮಾಸ್ಕೋದಿಂದ ಬೆಂಗಳೂರಿಗೆ ಬರಲು ವಿಶೇಷ ವಿಮಾನ ವ್ಯವಸ್ಥೆ ಮಾಡಿಸಿದ್ದು, ಈ ಎಲ್ಲಾ 110 ವೈದ್ಯಕೀಯ ವಿದ್ಯಾರ್ಥಿಗಳು ಜುಲೈ 13ರಂದು ಬುಧವಾರ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ.
ತಾಯ್ನಾಡಿಗೆ ಬರಲು ಅವಕಾಶ ದೊರೆಯುತ್ತಿದ್ದಂತೆ ಈ ಎಲ್ಲಾ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಹಾಗೂ ಅವಕಾಶ ಕಲ್ಪಿಸಿಕೊಟ್ಟ ಕೇಂದ್ರ ಸರ್ಕಾರದ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಸದರೂ ಸಚಿವರಾದ ಜೈಶಂಕರ್, ಹರದೀಪ್ಸಿಂಗ್ ಪುರಿ ಹಾಗೂ ರಷ್ಯಾದಲ್ಲಿರುವ ಭಾರತೀಯ ರಾಯಭಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.