ADVERTISEMENT

ಮಚ್ಚಿನಿಂದ ಕೊಲೆ ಯತ್ನ: 3 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 1:58 IST
Last Updated 29 ಜನವರಿ 2021, 1:58 IST

ದಾವಣಗೆರೆ: ಜಗಳೂರು ತಾಲ್ಲೂಕಿನ ಮೆದಕೆರೆನಹಳ್ಳಿ ಗ್ರಾಮದಲ್ಲಿ 2017 ರಲ್ಲಿ ನಡೆದ ಕೊಲೆ ಯತ್ನ ಪ್ರಕರಣ ಸಂಬಂಧ ಗ್ರಾಮದ ಶಿವರಾಜುಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ 3 ವರ್ಷ ಜೈಲು ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಶಿವರಾಜ ತಮ್ಮ ಮಾವನೊಂದಿಗೆ ಜಗಳ ಮಾಡುತ್ತಿದ್ದಾಗ ಗ್ರಾಮದ ಹಿರಿಯರಾದ ಪ್ರಭಾಕರ ಜಗಳ ಬಿಡಿಸಿ ಬುದ್ಧಿವಾದ ಹೇಳಿದ್ದರು. ಇದರಿಂದ ಕೋಪಗೊಂಡಿದ್ದ ಶಿವರಾಜ2017ರ ಜೂನ್‌ 6ರಂದು ರಾತ್ರಿ ಪ್ರಭಾಕರ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ.

ಈ ಸಂಬಂಧ ಬಿಳಿಚೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ವೆಂಕಟೇಶ್‌ ತನಿಖೆ ಮಾಡಿ ಶಿವರಾಜ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಕೆ.ಬಿ. ಗೀತಾ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡದ ಹಣದಲ್ಲಿ ₹ 15 ಸಾವಿರ ಗಾಯಾಳು ಪ್ರಭಾಕರನಿಗೆ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್‌.ವಿ. ಪಾಟೀಲ್ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.