ದಾವಣಗೆರೆ: ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ರಾಜಕೀಯ ಮಾಡುತ್ತಿವೆ. ಕೇಂದ್ರ ಸರ್ಕಾರವೂ ಕರ್ನಾಟಕವನ್ನು ಲಘುವಾಗಿ ಪರಿಗಣಿಸಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಹರಿಹರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯ ಕಳಸಾ–ಬಂಡೂರಿ ಯೋಜನೆ ಕಾಮಗಾರಿ ಸ್ಥಳಕ್ಕೆ ಭಾನುವಾರ ಗೋವಾ ಸ್ಪೀಕರ್ ಪ್ರಮೋದ್ ಸಾವಂತ ನೇತೃತ್ವದ ತಂಡ ಭೇಟಿ ನೀಡಿದೆ. ಇದನ್ನು ಗಮನಿಸಿದರೆ ಕರ್ನಾಟಕ ವಿರೋಧಿ ನಿಲುವು ತಳೆದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಮನೋಭಾವ ಗೋವಾ ಹಾಗೂ ಕೇಂದ್ರ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿದೆ’ ಎಂದರು.
ಈಚೆಗೆ ಬೆಂಗಳೂರಿನಲ್ಲಿ ನಡೆದ ಸರ್ವಪಕ್ಷಗಳ ಸಭೆ ರೈತರ ಕಣ್ಣೊರೆಸುವ ತಂತ್ರ. ಮಹದಾಯಿ ವಿಚಾರವಾಗಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವುದಾಗಿ ಮುಖ್ಯಮಂತ್ರಿ ಹೇಳಿದರೆ, ಅದು ವ್ಯರ್ಥ ಎಂದು ನೀರಾವರಿ ಸಚಿವರು ಹೇಳುತ್ತಿದ್ದಾರೆ. ಜನರ ದಿಕ್ಕು ತಪ್ಪಿಸಲು ಬಾಲಿಶ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಟೀಕಿಸಿದರು.
ಮಹದಾಯಿ ವಿವಾದದಲ್ಲಿ ಶೀಘ್ರವೇ ನ್ಯಾಯಮಂಡಳಿ ಅಂತಿಮ ತೀರ್ಪು ನೀಡಬೇಕು ಅಥವಾ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.