ADVERTISEMENT

6ರಂದು ನಗರಕ್ಕೆ `ಬ್ಲಡ್ ಮೊಬೈಲ್ ಬಸ್'

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 6:58 IST
Last Updated 4 ಜೂನ್ 2013, 6:58 IST

ದಾವಣಗೆರೆ: ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಾಜ್ಯದ ವಿವಿಧೆಡೆ ಸಂಚರಿಸುತ್ತಿರುವ `ಬ್ಲಡ್ ಮೊಬೈಲ್ ಬಸ್' ಜೂನ್ 6 ಮತ್ತು 7ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ.

6ರಂದು ಬೆಳಿಗ್ಗೆ 9ರಿಂದ ಸಂಜೆ 5.30ರವರೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಸ್ ನಿಲುಗಡೆ ಮಾಡಲಿದ್ದು, ಈ ಬಸ್‌ನಲ್ಲಿ ರಕ್ತದಾನ ಮಾಡುವ ವ್ಯವಸ್ಥೆ ಇರುತ್ತದೆ. ಮರುದಿನ ಅಂದರೆ, 7ರಂದು ಹರಿಹರಕ್ಕೆ ತೆರಳಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತ ಚಲನಾ ಪರಿಷತ್ ನೇತೃತ್ವದಲ್ಲಿ ಅಂದು 8ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ರಕ್ತದಾನದ ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾ ಸರ್ಕಾರಿ ಪ್ರೌಢಶಾಲಾ ಮೈದಾನದಿಂದ ಹೊರಟು ರಾಂ ಆ್ಯಂಡ್ ಕೋ ವೃತ್ತ, ಗುಂಡಿ ವೃತ್ತದ ಮೂಲಕ ಚಿಗಟೇರಿ ಆಸ್ಪತ್ರೆ ತಲುಪುವುದು.

9ಗಂಟೆಗೆ ಅತಿ ಹೆಚ್ಚು ರಕ್ತದಾನ ಮಾಡಿದ ದಾನಿಗಳಿಗೆ ಹಾಗೂ ಶಿಬಿರದ ಆಯೋಜಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಯಂ ಪ್ರೇರಿತ ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಸುಮಿತ್ರಾದೇವಿ, ಡಾ.ಸುನಂದಾ, ಡಾ.ಪಿ.ಬಿ.ಪಾಟೀಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.