ದಾವಣಗೆರೆ: ತಾಲ್ಲೂಕಿನ ಜರಿಕಟ್ಟೆ ಗ್ರಾಮದ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದ ಎದುರು ಚಲಿಸುತ್ತಿದ್ದ ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಹರಿಹರ ತಾಲ್ಲೂಕಿನ ದೇವರಬೆಳಕೆರೆ ಗ್ರಾಮದ ಪುಷ್ಪಾವತಿ (40) ಮೃತ ಮಹಿಳೆ. ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಪುತ್ರ ವಿನಯ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಯಿ ಮತ್ತು ಮಗ ಮಂಗಳವಾರ ಸಂಜೆ ದ್ವಿಚಕ್ರ ವಾಹನದಲ್ಲಿ ದೇವರಬೆಳಕೆರೆಯಿಂದ ದಾವಣಗೆರೆ ಕಡೆಗೆ ಬರುತ್ತಿದ್ದರು. ಈ ವೇಳೆ ಏಕಾಏಕಿ ಅಡ್ಡಬಂದ ನಾಯಿಗೆ ಬೈಕ್ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನದಿಂದ ಪುಷ್ಪಾವತಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.