ADVERTISEMENT

‘ಕರ್ನಾಟಕ ಆಗ್ರಹ ದಿನ’ ಆಚರಣೆ | ‘ಶೈಕ್ಷಣಿಕ ಜವಾಬ್ದಾರಿ ಸರ್ಕಾರವೇ ವಹಿಸಿಕೊಳ್ಳಲಿ’

​ಪ್ರಜಾವಾಣಿ ವಾರ್ತೆ
Published 26 ಮೇ 2020, 12:34 IST
Last Updated 26 ಮೇ 2020, 12:34 IST
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಜನಸಾಮಾನ್ಯರ ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಒ ಕಾರ್ಯಕರ್ತರು ಆನ್‌ಲೈನ್‌ ಮೂಲಕ ಅಖಿಲ ಕರ್ನಾಟಕ ಆಗೃಹ ದಿನವನ್ನು ದಾವಣಗೆರೆಯಲ್ಲಿ ಮಂಗಳವಾರ ಆಚರಿಸಿದರು.
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ಜನಸಾಮಾನ್ಯರ ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಒ ಕಾರ್ಯಕರ್ತರು ಆನ್‌ಲೈನ್‌ ಮೂಲಕ ಅಖಿಲ ಕರ್ನಾಟಕ ಆಗೃಹ ದಿನವನ್ನು ದಾವಣಗೆರೆಯಲ್ಲಿ ಮಂಗಳವಾರ ಆಚರಿಸಿದರು.   

ದಾವಣಗೆರೆ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಜನಸಾಮಾನ್ಯರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂಬುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಎಐಡಿಎಸ್‌ಒ ಕಾರ್ಯಕರ್ತರು ಮಂಗಳವಾರ ಫಲಕ ಹಿಡಿದು ಆನ್‌ಲೈನ್‌ ಮೂಲಕ ಪ್ರತಿಭಟಿಸುವ ಮೂಲಕ ‘ಅಖಿಲ ಕರ್ನಾಟಕ ಆಗ್ರಹ ದಿನ’ವನ್ನು ಆಚರಿಸಿದರು.

ಅನ್ನಕ್ಕೇ ಪರದಾಡುವ ಸ್ಥಿತಿ ಇರುವ ಸಂದರ್ಭದಲ್ಲಿ ಮಕ್ಕಳ ಶಿಕ್ಷಣದ ಭಾರವನ್ನು ಹೊರಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಶಾಲಾ–ಕಾಲೇಜುಗಳ ಶುಲ್ಕವನ್ನುಸರ್ಕಾರವೇ ಭರಿಸಬೇಕು. ವಿಶ್ವವಿದ್ಯಾಲಯಗಳ ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸಬೇಕು. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್‌ ಪಾಸ್‌ ನೀಡಬೇಕು. ಶಿಷ್ಯ ವೇತನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಹಾಸ್ಟೆಲ್‌ಗಳ ಅನುದಾನ ಹೆಚ್ಚಿಸಬೇಕು. ಶೈಕ್ಷಣಿಕ ವರ್ಷದ ಆರಂಭದಲ್ಲೇ ಹಾಸ್ಟೆಲ್‌ಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಪರೀಕ್ಷೆಯ ರೂಪುರೇಷೆಗಳನ್ನು ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆಗೆ ಚರ್ಚಿಸಿ ಪ್ರಜಾತಾಂತ್ರಿಕವಾಗಿ ರೂಪಿಸಬೇಕು. ವಿದ್ಯಾರ್ಥಿ ಸಮೂಹಕ್ಕೂ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಎಐಡಿಎಸ್‌ಒ ಜಿಲ್ಲಾ ಸಮಿತಿಯ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷೆ ನಾಗಜ್ಯೋಗಿ, ಕಾರ್ಯದರ್ಶಿ ಪೂಜಾ, ಸಂಘಟನಕಾರ ಅಭಿಷೇಕ್‌ ಅವರು ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಅಧಿಕಾರಿಗೆ ಮನವಿ ಸಲ್ಲಿಸಿದರು.

ಬೇಡಿಕೆಗಳ ಫಲಕಗಳನ್ನು ಹಿಡಿದಿದ್ದ ಕಾರ್ಯಕರ್ತರು, ತಮ್ಮ ಭಾವಚಿತ್ರ ಹಾಗೂ ವಿಡಿಯೊಗಳನ್ನು ವಾಟ್ಸ್‌ಆ್ಯಪ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.