ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ವ್ಯಾಸ ಮುನಿಗಳು ಸ್ಥಾಪಿಸಿದ ಐತಿಹಾಸಿಕ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು.
ರಥೋತ್ಸವ ಸಂದರ್ಭದಲ್ಲಿ ಗ್ರಾಮದೇವತೆಗಳಾದ ಮಹಾಲಕ್ಷ್ಮೀ, ಬಸವೇಶ್ವರ, ಬೀರಲಿಂಗೇಶ್ವರ, ದುರ್ಗಾದೇವಿ ದೇವರ ಮೂರ್ತಿಗಳ ಪಲ್ಲಕ್ಕಿ ಉತ್ಸವವೂ ನಡೆಯಿತು. ಸಾವಿರಾರು ಭಕ್ತರು ರಥದ ಕಳಸಕ್ಕೆ ಮಂಡಕ್ಕಿ, ಕಾಳುಮೆಣಸು, ಉತ್ತುತ್ತಿ ಎರಚುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಭಕ್ತರು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಹಾಗೂ ಮಕ್ಕಳು ಹರಕೆಯನ್ನು ತೀರಿಸಿದರು.
ದೇವಸ್ಥಾನದ ಸಮಿತಿವತಿಯಿಂದ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಶನಿವಾರ ಮುಳ್ಳೋತ್ಸವ, ಭಾನುವಾರ ಓಕುಳಿ ಮತ್ತು ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ರಾಜಸ್ವ ನಿರೀಕ್ಷಕ ರಮೇಶ್ ಪತ್ರಿಕೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಮುಖಂಡರು ಭಾಗವಹಿಸಿದ್ದರು.
ಕುಸ್ತಿ ಪಂದ್ಯಾವಳಿ: ಕುಂದೂರು ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಗ್ರಾಮಸ್ಥರ ಸಹಕಾರದಿಂದ ಮಾರ್ಚ್ 19 ಹಾಗೂ 20ರಂದು ಎರಡು ದಿನಗಳ ಕಾಲ ಕುಸ್ತಿ ಪಂದ್ಯಾವಳಿಗಳು ನಡೆಯ ಲಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.