ADVERTISEMENT

ನಿವೇಶನಕ್ಕೆ ಕಲಾವಿದನ ಮೊರೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 14:46 IST
Last Updated 23 ಡಿಸೆಂಬರ್ 2019, 14:46 IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ಕಲಾವಿದ ಕೊಡಗನೂರು ಜಯಕುಮಾರ್ ಮನವಿ ಸಲ್ಲಿಸಿದರು
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ಕಲಾವಿದ ಕೊಡಗನೂರು ಜಯಕುಮಾರ್ ಮನವಿ ಸಲ್ಲಿಸಿದರು   

ದಾವಣಗೆರೆ: ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದ ಕೊಡಗನೂರು ಜಯಕುಮಾರ್ ಅವರು ನಿವೇಶನಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ‘50 ವರ್ಷಗಳಿಂದ ರಂಗಭೂಮಿಯಲ್ಲಿ ದುಡಿಯುತ್ತಿದ್ದೇನೆ. ಆದರೆ ಇಲ್ಲಿಯವರೆಗೆ ಸ್ವಂತ ಸೂರು ಇಲ್ಲ. ಯಾವುದಾದರೊಂದು ಸ್ಕೀಂನಲ್ಲಿ ಮನೆಯನ್ನು ನೀಡಬೇಕು’ ಎಂದು ಮನವಿ ಸಲ್ಲಿಸಿದರು.

ಸಭೆಯಲ್ಲಿದ್ದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಬಸವಂತಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಅವರು ಮೇಲೆದ್ದು ನಮಸ್ಕರಿಸಿ, ‘ನಿಮ್ಮ ಬಗ್ಗೆ ಅಪಾರ ಗೌರವವಿದೆ. ನೀವು ಬಂದಿದ್ದರಿಂದ ಜನಸ್ಪಂದನ ಸಭೆಗೆ ಗೌರವ ಬಂದಿದೆ. ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

ಜನಸ್ಪಂದನ ಸಭೆ ಮುಗಿದ ನಂತರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ವೈಯಕ್ತಿಕವಾಗಿ ಸಹಾಯ ಮಾಡಲು ಒಪ್ಪಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿ ಕೆಲಸ ಮಾಡುವ ನಾವು ನೆನಪಿನಲ್ಲಿ ಉಳಿಯುವ ಕೆಲಸ ಮಾಡಬೇಕು. ಜಯಕುಮಾರ್ ಅವರಿಗೆ ಎಲ್ಲರೂ ಸೇರಿ ಒಂದು ಸೂರು ಕೊಡೋಣ’ ಎಂದು ಜಿಲ್ಲಾಧಿಕಾರಿ ಹೇಳಿದಾಗ ಹಾಜರಿದ್ದ ಅಧಿಕಾರಿಗಳು ಸಮ್ಮತಿ ಸೂಚಿಸಿದರು.

ಕೊಡಗನೂರು ಜಯಕುಮಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಈಗ ಗುಣಮುಖರಾಗಿದ್ದಾರೆ. ಅವರ ಪುತ್ರ ಮಾರುತಿ ತರಕಾರಿ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.