ADVERTISEMENT

ಬಕ್ರೀದ್‌: ಗೋಹತ್ಯೆ ತಡೆಯಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2018, 17:59 IST
Last Updated 14 ಆಗಸ್ಟ್ 2018, 17:59 IST

ದಾವಣಗೆರೆ: ಗೋಹತ್ಯೆಯನ್ನು ನಿಷೇಧಿಸಲಾಗಿದ್ದು, ಮುಂದಿನ ವಾರ ನಡೆಯುವ ಬಕ್ರೀದ್‌ ಹಬ್ಬದ ವೇಳೆ ನಗರದಲ್ಲಿ ಎಲ್ಲಿಯೂ ಹಸುವಿನ ವಧೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಆಹಾರಕ್ಕಾಗಿ ಒಂಟೆ ವಧಿಸುವುದನ್ನೂ ನಿಷೇಧಿಸಲಾಗಿದೆ. ಹಬ್ಬದ ವೇಳೆ ನಗರದಲ್ಲಿ ಎಲ್ಲಿಯೂ ಗೋಹತ್ಯೆ ಹಾಗೂ ಒಂಟೆಗಳ ವಧೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳ ತಂಡ ರಚಿಸಬೇಕು. ಹತ್ಯೆ ನಡೆಸಿರುವುದು ಕಂಡು ಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು’ ಎಂದು ಆದೇಶಿಸಿದರು.

ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ ಸುಂಕದ, ‘ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರವಾನಗಿ ಸಿಗದೇ ಇರುವುದರಿಂದ ನಗರದಲ್ಲಿ ಅತ್ಯಾಧುನಿಕ ಕಸಾಯಿಖಾನೆ ಆರಂಭಿಸಲು ಸಾಧ್ಯವಾಗಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮರ ಜನಸಂಖ್ಯೆ ಇರುವ ಕಡೆ ತಾತ್ಕಾಲಿಕವಾಗಿ ಕಸಾಯಿಕಾನೆ ತೆರೆಯಲು ಪರವಾನಗಿ ನೀಡುತ್ತೇವೆ. ಪ್ರಾಣಿಯ ರಕ್ತ ಚರಂಡಿ ಸೇರದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

‘ನಗರದಲ್ಲಿ ಒಂಟೆ ಹಾಗೂ ಹಸುವನ್ನು ವಧಿಸುವುದು ಎಲ್ಲಿಯೂ ಕಂಡು ಬಂದಿಲ್ಲ. ಕುರಿ, ಮೇಕೆಯನ್ನೇ ಹೆಚ್ಚಾಗಿ ವಧಿಸಲಾಗುತ್ತದೆ. ಆರೋಗ್ಯ ನಿರೀಕ್ಷಕರ, ಪಶು ವೈದ್ಯಾಧಿಕಾರಿಗಳ ಹಾಗೂ ಪೊಲೀಸರನ್ನು ಒಳಗೊಂಡ ತಂಡವನ್ನು ರಚಿಸಿ ಹಬ್ಬದ ಸಂದರ್ಭದಲ್ಲಿ ಗೋಹತ್ಯೆ ಆಗದಂತೆ ನಿಗಾ ವಹಿಸಲಾಗುವುದು’ ಎಂದು ಅವರು ತಿಳಿಸಿದರು.

ಅಕ್ರಮ ಸಾಗಾಟ:

‘ಜಾನುವಾರು ಅಕ್ರಮ ಸಾಗಾಟವನ್ನು ತಡೆಯಲು ಆರ್‌ಟಿಒ, ಪೊಲೀಸ್‌ ಹಾಗೂ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ತಂಡವನ್ನು ರಚಿಸಬೇಕು. ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವುದು ಕಂಡು ಬಂದ ತಕ್ಷಣ ಯಾರನ್ನು ಸಂಪರ್ಕಿಸಬೇಕು ಎಂಬ ಮಾಹಿತಿಯನ್ನು ನಾಗರಿಕರಿಗೆ ನೀಡಬೇಕು. ಗೋರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು’ ಎಂದೂ ಜಿಲ್ಲಾಧಿಕಾರಿ ಸೂಚಿಸಿದರು.

ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಶಿವಪ್ರಸಾದ ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.