ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಮುಖಂಡ ಡಿ. ಬಸವರಾಜ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅವಶ್ಯಕ. ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ, ತಿಳಿವಳಿಕೆಗಳೊಂದಿಗೆ ವಿಷಯವನ್ನು ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ತಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿಲಾಗಿದೆ ಎಂದು ಡಿ.ಬಸವರಾಜ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಅವಿಭಜಿತ ಚಿತ್ರದುರ್ಗ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿ, ರಾಜ್ಯ ಎನ್.ಎಸ್.ಯು.ಐ. ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ, ಕೆಪಿಸಿಸಿ ಸದಸ್ಯರಾಗಿ, ಕಾರ್ಯದರ್ಶಿಯಾಗಿ,ಮಾಧ್ಯಮ ವಿಶ್ಲೇಷಕರಾಗಿ ಕೆಲಸ ಮಾಡಿದ್ದೇನೆ. ನಗರಸಭೆ ಸದಸ್ಯ, ಅಧ್ಯಕ್ಷನಾಗಿದ್ದೆ’ ಎಂದು ತಿಳಿಸಿದರು.
ಬಂದ್ಗೆ ಬೆಂಬಲ ಸೆ.28ರಂದು ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲಿಸಿ ಸಕ್ರಿಯವಾಗಿ ಭಾಗವಹಿಸಲಿದೆ ಎಂದು ಮಹಾನಗರ ಪಾಲಿಕೆಯ ವಿರೋಧಪಕ್ಷದ ನಾಯಕ ಎ. ನಾಗರಾಜ್ ತಿಳಿಸಿದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಇತ್ತೀಚಿನ ಕಾಯ್ದೆಗಳು ಜನವಿರೋಧಿ ರೈತ ವಿರೋಧಿಯಾಗಿದೆ. ಎಪಿಎಂಸಿ ಕಾಯ್ದೆಯಿಂದ ರೈತರ ಜತೆಗೆ ಸಾವಿರಾರು ಹಮಾಲರು ಬೀದಿಗೆ ಬೀಳಲಿದ್ದಾರೆ ಎಂದುಪಾಲಿಕೆ ಸದಸ್ಯ ಕೆ. ಚಮನ್ಸಾಬ್ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ದೇವರಮನಿ ಶಿವಕುಮಾರ್, ಗಡಿಗುಡಾಳ್ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಕೆ.ಎಂ. ಮಂಜುನಾಥ್, ಬಿ.ಎಚ್. ಉದಯಕುಮಾರ್, ದಾದಾಪೀರ್, ಡಿ. ಶಿವಕುಮಾರ್ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.