ದಾವಣಗೆರೆ: ರೈತರ, ಜನರ ಕತ್ತು ಹಿಸುಕುವ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ತಿದ್ದುಪಡಿ ಕಾಯ್ದೆಗಳನ್ನು ಜಾರಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮವನ್ನು ವಿರೋಧಿಸಿ ಭಾರತ್ ಬಂದ್ಗೆ ಕರೆ ಕೊಡಲಾಗಿದೆ. ದಾವಣಗೆರೆಯಲ್ಲಿ ಬೆಳಿಗ್ಗೆ ಬೈಕ್ ರ್ಯಾಲಿ ಮಾಡಲಾಗುವುದು. ಬಳಿಕ ಬಂದ್ ಮಾಡಲಾಗವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ (ಕೋಡಿಹಳ್ಳಿ ಬಣ) ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ತಿಳಿಸಿದರು.
ಪ್ರಗತಿಪರ ಸಂಘಟನೆಗಳು ಬೆಂಬಲ ಕೊಡುತ್ತಿದ್ದಾರೆ. ನಗರದ ನಾಗರಿಕರು ಕೂಡ ಸಹಕಾರ ಕೊಡಬೇಕು. ರೈತರು ಇದ್ದರೆ ಉಳಿದವರು ಉಳಿಯುತ್ತಾರೆ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೊಣಕಾಲಿನವರೆಗೆ ಹಸಿರು ಸಾಲು ಹಾಕಿಕೊಂಡು ನಾನು ರೈತರ ಪರ ಎಂದು ಹೇಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ರೈತರ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ. ಭೂಸುಧಾರಣೆ ಕಾಯ್ದೆ ಸಹಿತ ಎಲ್ಲ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತರುವ ಮೊದಲು ಅದರ ಸಾಧಕ, ಬಾಧಕಗಳ ಬಗ್ಗೆ ಚರ್ಚೆ ನಡೆಸಬೇಕು. ಅದ್ಯಾವುದೂ ಮಾಡಿದೇ ಕಾಯ್ದೆಗೆ ಅನುಮೋದನೆ ನೀಡಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಗೋಶಾಲೆ ಬಸವರಾಜು, ಸಂಘಟನಾ ಕಾರ್ಯದರ್ಶಿ ರಾಜು ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.