
ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಹಲವು ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸ್ವಪಕ್ಷೀಯ ಮುಖಂಡರು ತಿರುಗಿಬಿದ್ದಿದ್ದಾರೆ. ಹೊನ್ನಾಳಿಯಲ್ಲಿ ನೀಡಿದ ಹೇಳಿಕೆಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
‘ಇತ್ತೀಚೆಗೆ ಹೊನ್ನಾಳಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಜಿಲ್ಲೆಯ ಹಲವು ಕ್ಷೇತ್ರಗಳ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಸಚಿವರನ್ನಾಗಿ ಮಾಡುವಂತೆ ಕೋರಿದ್ದಾರೆ. ಪಕ್ಷದ ಶಿಷ್ಟಾಚಾರವನ್ನು ಉಲ್ಲಂಘಿಸುವಂತಹ ಹೇಳಿಕೆಯನ್ನು ಯಡಿಯೂರಪ್ಪ ಅವರಿಂದ ನಿರೀಕ್ಷಿಸಿರಲಿಲ್ಲ’ ಎಂದು ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
‘ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಪ್ರಶ್ನಾತೀತ ನಾಯಕ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದಿರುವ ಅವರ ಬಗ್ಗೆ ಅಪಾರ ಗೌರವವಿದೆ. ಅವರು ಭಾಷಣದಲ್ಲಿ ಆಡಿರುವ ಮಾತುಗಳ ಬಗ್ಗೆ ಮಾತ್ರ ಆಕ್ಷೇಪವಿದೆ. ಇದು ಅವರಿಗೆ ಶೋಭೆ ತರುವುದಿಲ್ಲ. ಪಕ್ಷದ ಕಾರ್ಯಕರ್ತರ ಉತ್ಸಾಹ ಕುಗ್ಗಿಸುವ ಪ್ರಯತ್ನವನ್ನು ಯಡಿಯೂರಪ್ಪ ಅವರು ಮಾಡಬಾರದು’ ಎಂದು ಅಸಮಾಧಾನ ಹೊರಹಾಕಿದರು.
‘ಬಿಜೆಪಿ ಇತರ ಪಕ್ಷಕ್ಕಿಂತ ಭಿನ್ನ. ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಶಿಷ್ಟಾಚಾರವಿದೆ. ಕೇಂದ್ರ ಸಂಸದೀಯ ಮಂಡಳಿಯು ಅಭ್ಯರ್ಥಿ ಆಯ್ಕೆ ಮಾಡುತ್ತದೆ. ಏಕಾಏಕಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಇಂತಹವರನ್ನೇ ಗೆಲ್ಲಿಸುವಂತೆ ಅವರು ಮಾಡಿಕೊಂಡ ಮನವಿ ಸರಿಯಲ್ಲ. ಪಕ್ಷದಿಂದ ಹೊರನಡೆದು ಪ್ರಾದೇಶಿಕ ಪಕ್ಷವೊಂದನ್ನು ಸಂಘಟಿಸುವ ಹುನ್ನಾರ ಅವರಲ್ಲಿ ಇರುವಂತೆ ಕಾಣುತ್ತಿದೆ’ ಎಂದು ದೂರಿದರು.
‘ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಪ್ರತಿ ಜಿಲ್ಲೆಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ವಿಬಿ–ಜಿರಾಮ್ಜಿ ಕುರಿತು ಇತ್ತೀಚೆಗೆ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪಕ್ಷದ ಶಾಸಕ ಬಿ.ಪಿ. ಹರೀಶ್, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರಿಗೆ ಆಹ್ವಾನ ನೀಡಿರಲಿಲ್ಲ. ಗುಂಪುಗಾರಿಕೆ ಮಾಡುವವರ ಜೊತೆ ಸೇರಿದ ವಿಜಯೇಂದ್ರ ಅವರು ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ಬಿಜೆಪಿ ಮುಖಂಡರಾದ ಅಣಬೇರು ಜೀವನಮೂರ್ತಿ, ಎಂ.ಆರ್.ಮಹೇಶ್, ಮಂಜಾ ನಾಯ್ಕ, ದೇವೇಂದ್ರಪ್ಪ, ಶ್ಯಾಮ್ ಹಾಜರಿದ್ದರು.
ಬಿಜೆಪಿ ತತ್ವ, ಸಿದ್ಧಾಂತದಡಿ ಕೆಲಸ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಜಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನಾನು ಬೇರೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲಎಚ್.ಪಿ. ರಾಜೇಶ್, ಮಾಜಿ ಶಾಸಕ
ಪಕ್ಷದಲ್ಲಿ ಕೆಲಸ ಮಾಡಲು ಎಲ್ಲರಿಗೂ ಅವಕಾಶ ಮಾಡಿಕೊಡಿ. ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್ ಕೊಡಿ. ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡುವುದು ಸರಿಯಲ್ಲಶಿವಕುಮಾರ್ ಎಚ್.ಎಸ್, ಅಧ್ಯಕ್ಷ ತುಮ್ಕೋಸ್, ಚನ್ನಗಿರಿ
5ರಂದು ಜಿಎಂಐಟಿ ಅತಿಥಿಗೃಹದಲ್ಲಿ ಸಭೆ
ವಿಧಾನಸಭಾ ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ ಯಡಿಯೂರಪ್ಪ ಅವರ ಹೇಳಿಕೆಯಿಂದ ಬೇಸರಗೊಂಡ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಸಭೆಯನ್ನು ಜಿಎಂಐಟಿ ಅತಿಥಿಗೃಹದಲ್ಲಿ ಮಾರ್ಚ್ 5ರಂದು ಕರೆಯಲಾಗಿದೆ ಎಂದು ಶಾಂತರಾಜು ತಿಳಿಸಿದರು.
‘ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.ಪಿ. ಹರೀಶ್ ಅವರನ್ನು ಸಭೆಗೆ ಆಹ್ವಾನಿಸಿದ್ದೇವೆ. ಜಿಲ್ಲೆಯ ನೂರಕ್ಕೂ ಹೆಚ್ಚು ಮುಖಂಡರು ಹಾಗೂ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಲಿದ್ದಾರೆ. ಇಲ್ಲಿ ನಡೆಯುವ ಚರ್ಚೆಯನ್ನು ಪಕ್ಷದ ರಾಜ್ಯ ಮತ್ತು ರಾಷ್ಟ್ರ ನಾಯಕರ ಗಮನಕ್ಕೆ ತರಲಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.