ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪದೇಪದೆ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ವಿಷಯ ಪ್ರಸ್ತಾಪಿಸಿ, ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಪಕ್ಷದ ಮುಖಂಡರು, ‘ಸಂಸತ್ನಲ್ಲೂ ಸುಳ್ಳು ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ, ಕಲಾಪಗಳು ಸುಲಭವಾಗಿ ನಡೆಯಲು ಅವಕಾಶ ನೀಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಶಾಂತ್ ಭೂಷಣ್ ಅವರು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಪರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಡಿ. 14ರಂದು ಅರ್ಜಿಯನ್ನು ವಜಾಗೊಳಿಸಿದೆ. ಇನ್ನಾದರೂ ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡುತ್ತಾ, ವಿವಾದ ಸೃಷ್ಟಿ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಂಡು ಸಂಸತ್ ಕಲಾಪಗಳು ಸುಲಲಿತವಾಗಿ ನಡೆಯಲು ಅವಕಾಶ ನೀಡುವಂತೆ ಕಾಂಗ್ರೆಸ್ ಮುಖಂಡರಿಗೆ ರಾಷ್ಟ್ರಪತಿಗಳು ತಿಳಿಹೇಳಬೇಕು ಎಂದು ಬಿಜೆಪಿ ಮುಖಂಡರು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್, ಪ್ರಧಾನ ಕಾರ್ಯದರ್ಶಿಗಳಾದ ಎಚ್.ಎನ್. ಶಿವಕುಮಾರ್, ರಮೇಶ್ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್ಕುಮಾರ್, ಮುಖಂಡರಾದ ರಾಜನಹಳ್ಳಿ ಶಿವಕುಮಾರ್, ಧನಂಜಯ ಕಡ್ಲೆಬಾಳು, ಚೇತೂಬಾಯಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.