ADVERTISEMENT

ನಿರುದ್ಯೋಗ ಭಾಗ್ಯ ಕಲ್ಪಿಸಿದ ಸಿದ್ದರಾಮಯ್ಯ: ಬಿಜೆಪಿಯ ರಘು ಕೌಟಿಲ್ಯ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 9:56 IST
Last Updated 12 ಫೆಬ್ರುವರಿ 2026, 9:56 IST
<div class="paragraphs"><p>ರಘು ಕೌಟಿಲ್ಯ</p></div>

ರಘು ಕೌಟಿಲ್ಯ

   

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದಾಗಿನಿಂದ‌ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಯುವಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗ ಭಾಗ್ಯ ಕಲ್ಪಿಸಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ರಘು ಕೌಟಿಲ್ಯ ಆರೋಪಿಸಿದರು.

‘ಮೂರು ವರ್ಷಗಳಿಂದ ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿ ನಡೆದಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರು 1.32 ಲಕ್ಷ ಹುದ್ದೆಗಳಿಂದ ವಂಚಿತರಾಗಿದ್ದಾರೆ. ವಯೋಮಿತಿ ಮೀರಿದ ಪರಿಣಾಮ ಉದ್ಯೋಗಾವಕಾಶಗಳು ಕೈತಪ್ಪಿವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ADVERTISEMENT

‘ಬಿಜೆಪಿ ಅಧಿಕಾರವಧಿಯಾದ 2022–23ರಲ್ಲಿ ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ₹ 190 ಕೋಟಿ ಅನುದಾನ ನೀಡಲಾಗಿತ್ತು. 2023–24ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ₹ 50 ಕೋಟಿ ನೀಡಿದ್ದಾರೆ. ಸವಿತಾ ಸಮಾಜಕ್ಕೆ 2022–23ರಲ್ಲಿ ₹ 10 ಕೋಟಿ ಅನುದಾನ ಸಿಕ್ಕಿತ್ತು. 2023–24ರಲ್ಲಿ ಕೇವಲ ₹ 2.5 ಕೋಟಿ ನೀಡಲಾಗಿದೆ. ಪಂಚ ಗ್ಯಾರಂಟಿ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಅನುದಾನ ಕೊಚ್ಚಿ ಹೋಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘2023ರಿಂದ ಈಚೆಗೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ವಿದ್ಯಾರ್ಥಿನಿಲಯ ನಿರ್ಮಾಣವಾಗಿಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1.14 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಹಿಂದುಳಿದ ವರ್ಗಗಳ ಜನಸಂಖ್ಯೆ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದರೆ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಹಿತಶತ್ರು ಆಗಲಿದ್ದಾರೆ’ ಎಂದು ಕಿಡಿಕಾರಿದರು.

‘ರಾಜ್ಯ ಸರ್ಕಾರದಲ್ಲಿ ಕಮಿಷನ್‌ ದಂಧೆ ಮಿತಿಮೀರಿದೆ. ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. 500 ಮೀಟರ್‌ಗೆ ಒಂದು ಮದ್ಯದಂಗಡಿ ಸಿಗುತ್ತಿದೆ. ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದಕ್ಕೆ ಮುನ್ನುಡಿ ಬರೆಯಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಒಬಿಸಿ ಮೋರ್ಚಾ ಮುಖಂಡರಾದ ಎ.ಎಸ್. ವೆಂಕಟೇಶ, ರಾಜನಹಳ್ಳಿ ಶಿವಕುಮಾರ್, ಮಹೇಂದ್ರ ಹೆಬ್ಬಾಳ, ರಘು ಅಂಬರ್ಕರ್, ಜಯಮ್ಮ, ಐರಣಿ ಅಣ್ಣೇಶ್ ಹಾಜರಿದ್ದರು.

ಸುದೀರ್ಘ ಅವಧಿ ಮುಖ್ಯಮಂತ್ರಿ ಎಂಬುದಾಗಿ ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ. ದೇವರಾಜ ಅರಸು ಕನಸುಗಳನ್ನು ನುಚ್ಚುನೂರು ಮಾಡಿದ್ದಾರೆ
ರಘು ಕೌಟಿಲ್ಯ, ರಾಜ್ಯ ಘಟಕದ ಅಧ್ಯಕ್ಷಬಿಜೆಪಿ ಒಬಿಸಿ ಮೋರ್ಚಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.