ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ‘ನಮ್ಮಾಭಿಮಾನ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ದಾವಣಗೆರೆ: ‘ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ತೊರೆದು ಹೋಗಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಬಾಗಿಲು ಬಡಿದು, ಮತ್ತೇಕೆ ಪಕ್ಷಕ್ಕೆ ಮರಳಿದರೋ ಗೊತ್ತಿಲ್ಲ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ನಗರದಲ್ಲಿ ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗವು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರ 74ನೇ ಜನ್ಮದಿನದ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ‘ನಮ್ಮಾಭಿಮಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಜೆಡಿಎಸ್–ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ ಉಪಮುಖ್ಯಮಂತ್ರಿಯಾಗಲು, ಮುಖ್ಯಮಂತ್ರಿ ಹುದ್ದೆಗೆ ಏರಲು ಜಿ.ಎಂ. ಸಿದ್ದೇಶ್ವರ ಪರಿಶ್ರಮವಿದೆ. ಆರ್ಥಿಕ ಶಕ್ತಿಯಾಗಿ, ಹೆಗಲಿಗೆ ಹೆಗಲು ಕೊಟ್ಟು ಜೊತೆಗಿದ್ದ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ’ ಎಂದು ಅಸಮಾಧಾನ ಹೊರಹಾಕಿದರು.
‘ಪಕ್ಷದಲ್ಲಿ ಸಮಸ್ಯೆ ಸೃಷ್ಟಿಸುವ ವ್ಯಕ್ತಿಗಳನ್ನು ಮಟ್ಟಹಾಕಬೇಕಿದೆ. ಇದಕ್ಕೆ ನಮ್ಮ ಶಕ್ತಿಯನ್ನು ಇನ್ನೂ ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಸಿದ್ದೇಶ್ವರ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಹೇಳಿದರು.
‘ನಾನು ಬಿಜೆಪಿಯ ಶಿಸ್ತಿನ ಸಿಪಾಯಿ. ಭದ್ರಾ ಜಲಾಶಯದ ಬಲದಂಡೆ ನಾಲೆಯ ವಿಚಾರವಾಗಿ ಚರ್ಚಿಸಲು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದೆ. ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಿಲ್ಲ. ತಪ್ಪು ದಾರಿಗೆ ಎಳೆಯುವ ಹುನ್ನಾರವನ್ನು ಕೆಲವರು ಮಾಡುತ್ತಿದ್ದಾರೆ’ ಎಂದು ಜಿ.ಎಂ.ಸಿದ್ದೇಶ್ವರ ಸ್ಪಷ್ಟಪಡಿಸಿದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿರುವ ಭಿನ್ನಮತಿಯ ನಾಯಕರು ಸಿದ್ದೇಶ್ವರ ಜನ್ಮದಿನಾಚರಣೆಯ ನೆಪದಲ್ಲಿ ಗೋಪ್ಯ ಸಭೆ ನಡೆಸಿದರು. ಸೋಮವಾರ ರಾತ್ರಿಯೇ ದಾವಣಗೆರೆ ಆಗಮಿಸಿದ್ದ ನಾಯಕರು, ಜಿ.ಎಂ. ವಿಶ್ವವಿದ್ಯಾಲಯದ ಅತಿಥಿಗೃಹದಲ್ಲಿ ಮಂಗಳವಾರ ಕಾರ್ಯಕ್ರಮಕ್ಕೂ ಮುನ್ನ ಬಹುಹೊತ್ತು ಚರ್ಚೆ ನಡೆಸಿದರು.
‘ಇದು ರಾಜಕೀಯ ಸಭೆಯಲ್ಲ’ ಎಂದು ಬಹಿರಂಗ ಕಾರ್ಯಕ್ರಮದಲ್ಲಿ ಹೇಳುತ್ತಲೇ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಸಚಿವ ಕುಮಾರ ಬಂಗಾರಪ್ಪ, ಬಿ.ಪಿ.ಹರೀಶ್ ಹಾಜರಿದ್ದರು.
ಜಿ.ಎಂ.ಸಿದ್ದೇಶ್ವರ ಅವರ ಜೊತೆಗೆ ನಾವಿದ್ದೇವೆ. ಒಗ್ಗಟ್ಟಿನಲ್ಲಿ ಬಲವಿದೆ, ಯಶಸ್ಸು ಕೂಡ ಇದೆ. ಪಕ್ಷವನ್ನು ಕಟ್ಟಿ ಬೆಳೆಸುವ ಸಂಕಲ್ಪ ಮಾಡಿದ್ದೇವ-ಪ್ರತಾಪ್ ಸಿಂಹ, ಮಾಜಿ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.