
ಸಾಸ್ವೆಹಳ್ಳಿ: ಹೊನ್ನಾಳಿ- ಸಾಸ್ವೆಹಳ್ಳಿ- ಆನವೇರಿ- ಶಿವಮೊಗ್ಗ ಮಾರ್ಗದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಮತ್ತು ಕೆಲವು ಹಳ್ಳಿಗಳಲ್ಲಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ, ಚಿಕ್ಕಬಾಸೂರು ತಾಂಡಾ (ವಿಜಯಪುರ) ಗ್ರಾಮಸ್ಥರು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.
‘ಸಾರಿಗೆ ಸಿಬ್ಬಂದಿ ಖಾಸಗಿ ಬಸ್ ಮಾಲೀಕರೊಂದಿಗೆ ಶಾಮೀಲಾಗಿ ಈ ರೀತಿ ಅವ್ಯವಸ್ಥೆ ಮಾಡುತ್ತಿದ್ದಾರೆ. ಕೆಎಸ್ಆರ್ಟಿಸಿ ಬಸ್ಗಳ ಸಮಯ ಬದಲಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಸರಿಯಾದ ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಹೊನ್ನಾಳಿ ಪೊಲೀಸರು ಮನವೊಲಿಸಲು ಯತ್ನಿಸಿದರೂ, ಡಿಪೊ ಮ್ಯಾನೇಜರ್ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಅಂದಾಜು ಒಂದು ಗಂಟೆಗೂ ಹೆಚ್ಚು ಕಾಲ ಬಸ್ ತಡೆದರು.
ಹೊನ್ನಾಳಿ ಡಿಪೊ ಮ್ಯಾನೇಜರ್ ರಾಮಚಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಸರಿಪಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
‘ಡಿಸೆಂಬರ್ ತಿಂಗಳಾದ್ದರಿಂದ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಹೆಚ್ಚಿನ ಬಸ್ಗಳನ್ನು ನಿಯೋಜಿಸಲಾಗಿದೆ. ಹೀಗಾಗಿ ಸಮಯದ ವ್ಯತ್ಯಾಸವಾಗಿದೆ’ ಎಂದು ಡಿಪೊ ಮ್ಯಾನೇಜರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.