ದಾವಣಗೆರೆ: ಕೇಂದ್ರ ಸರ್ಕಾರ ಕೇವಲ ಜಾತಿಯ ಜನಸಂಖ್ಯೆಯನ್ನು ಲೆಕ್ಕಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜೊತೆಗೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಕೇಂದ್ರಕ್ಕಿಂತ ರಾಜ್ಯದ ಜಾತಿ ಗಣತಿ ಭಿನ್ನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
‘ಸಾಮಾಜಿಕ ನ್ಯಾಯಕ್ಕೆ ಜಾತಿಗಳ ಸ್ಥಿತಿ–ಗತಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ಇದಕ್ಕೆ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಗೊತ್ತಾಗಬೇಕು. ಇಲ್ಲವಾದರೆ ಸಾಮಾಜಿಕ ನ್ಯಾಯ ನೀಡುವುದು ಕಷ್ಟ’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕೇಂದ್ರ ಸರ್ಕಾರ 2027ರಿಂದ ಜಾತಿ ಗಣತಿ ಶುರು ಮಾಡುವುದಾಗಿ ಹೇಳಿದೆ. ಕೇಂದ್ರದ ಜಾತಿ ಗಣತಿಗೆ ರಾಜ್ಯ ಸರ್ಕಾರದ ತಕರಾರು ಇಲ್ಲ. ಜಾತಿ ಗಣತಿಯ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡುವುದಾಗಿ ಕೇಂದ್ರ ಸರ್ಕಾರ ಈವರೆಗೆ ಸ್ಪಷ್ಟಪಡಿಸಿಲ್ಲ’ ಎಂದರು.
‘ಎಚ್.ಕಾಂತರಾಜ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಪ್ರಬಲ ಮತ್ತು ದುರ್ಬಲ ವರ್ಗಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಈ ಸಮೀಕ್ಷೆ ನಡೆದು 10 ವರ್ಷ ಕಳೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ–1995ರ ಕಲಂ 11ರ ಪ್ರಕಾರ 10 ವರ್ಷದ ಬಳಿಕ ಹೊಸ ವರದಿ ತರಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ, ಹೊಸ ಜಾತಿ ಗಣತಿಗೆ ನಿರ್ಧರಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.