ADVERTISEMENT

ಒಳಮೀಸಲಾತಿ ಸಮಸ್ಯೆ ಸೃಷ್ಟಿಸಿ ಸರ್ಕಾರಕ್ಕೆ ಸಂಕಷ್ಟ: ಛಲವಾದಿ ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 14:00 IST
Last Updated 27 ಫೆಬ್ರುವರಿ 2026, 14:00 IST
<div class="paragraphs"><p>ಛಲವಾದಿ ನಾರಾಯಣಸ್ವಾಮಿ</p></div>

ಛಲವಾದಿ ನಾರಾಯಣಸ್ವಾಮಿ

   

ದಾವಣಗೆರೆ: ನೇರ ನೇಮಕಾತಿ ಮತ್ತು ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮಸ್ಯೆಗಳನ್ನು ಸೃಷ್ಟಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸಮಯ ಸಾಧಕತನ ಪ್ರದರ್ಶಿಸಿ ರಾಜ್ಯದ ಜನರನ್ನು ಗೊಂದಲಕ್ಕೆ ತಳ್ಳಿದೆ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

‘ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಏರಿಕೆ ಮಾಡಲಾಗಿದೆ. ಸಂವಿಧಾನದ ಪರಿಚ್ಛೇದ 9ಕ್ಕೆ ಸೇರಿಸದೇ ಪರಿಷ್ಕೃತ ಮೀಸಲಾತಿ ಅನುಷ್ಠಾನಕ್ಕೆ ತರಲು ಅವಕಾಶವಿದೆ. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಕೂಡಲೇ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ಷಮೆ ಕೇಳಬೇಕು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ADVERTISEMENT

‘ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಆಶ್ವಾಸನೆ ನೀಡಿತ್ತು. 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡಿರುವ ನಿರ್ಧಾರ ಕೇವಲ ಕಣ್ಣೊರೆಸುವ ತಂತ್ರ. ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದರೂ ವಿಳಂಬವಾಗಿದ್ದು ಏಕೆ ಎಂಬುದನ್ನು ಜನರಿಗೆ ಸ್ಪಷ್ಟಪಡಿಸಲಿ’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಲಾಹರಣ ಮಾಡಿ ಅಧಿಕಾರವಧಿ ಪೂರ್ಣಗೊಳಿಸಲು ಹವಣಿಸುತ್ತಿದೆ. ಇದನ್ನು ಅರ್ಥ ಮಾಡಿಕೊಂಡ ಯುವಜನರು ನೇಮಕಾತಿಗೆ ಒತ್ತಾಯಿಸಿ ಧಾರವಾಡದಲ್ಲಿ ಬೀದಿಗೆ ಇಳಿದರು. ಇದರಿಂದ ಭಯಗೊಂಡ ಸರ್ಕಾರ ಏಕಾಏಕಿ ನಿರ್ಧಾರ ಪ್ರಕಟಿಸಿದೆ. ಇದರಿಂದ ಯುವಜನರಿಗೆ ನ್ಯಾಯ ಸಿಗುವ ಭರವಸೆ ಇಲ್ಲ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಲ್ಲಿಯೇ ಹೆಚ್ಚು ಹುದ್ದೆ ಖಾಲಿ ಇರುವುದು ವಿಪರ್ಯಾಸ. ಗೃಹಲಕ್ಷ್ಮಿ, ಯುವನಿಧಿ ಹಣ ದುರ್ಬಳಕೆ ಆಗುತ್ತಿದೆ. ಗೃಹ ಲಕ್ಷ್ಮಿ ಹಣದ ಲೆಕ್ಕ ನೀಡಲು ರಾಜ್ಯ ಸರ್ಕಾರ ಇನ್ನೂ ಮುಂದಾಗಿಲ್ಲ. ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯ ಅನುದಾನ ಲೂಟಿ ಆಗಿದೆ’ ಎಂದು ದೂರಿದರು.

‘ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಒಳಮೀಸಲು ಹಂಚಿಕೆ ಮಾಡಿ ರೂಪಿಸಿದ ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪ–ವರ್ಗೀಕರಣ) ಮಸೂದೆಗೆ ರಾಜ್ಯಪಾಲರಿಂದ ತರಾತುರಿಯಲ್ಲಿ ಅನುಮೋದನೆ ಪಡೆಯಲಾಗಿದೆ. ಅಲೆಮಾರಿ ಸಮುದಾಯಕ್ಕೆ ದೊಡ್ಡ ವಂಚನೆ ಮಾಡಲಾಗಿದೆ. ನ್ಯೂನತೆಗಳನ್ನು ಸರಿಪಡಿಸದೇ ಅನುಮೋದನೆ ಪಡೆಯಲಾಗಿದೆ’ ಎಂದು ಅಸಮಾಧಾನ ಹೊರಹಾಕಿದರು.

ಸಾಮಾಜಿಕ ನ್ಯಾಯ ನೀಡುತ್ತಿರುವುದಾಗಿ ಪದೇ ಪದೇ ಹೇಳುವ ರಾಜ್ಯ ಸರ್ಕಾರ ಸಾಮಾಜಿಕ ಅನ್ಯಾಯ ಮಾಡಿದೆ. ಒಳಮೀಸಲಾತಿ ಕಾಯ್ದೆ ಅನುಷ್ಠಾನಕ್ಕೆ ತಂದರೂ ಪ್ರಯೋಜನ ಆಗದು
ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷದ ನಾಯಕ ವಿಧಾನಪರಿಷತ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.