ಚನ್ನಗಿರಿ: ‘ಪಟ್ಟಣದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ ತಪ್ಪಿತಸ್ಥರನ್ನು ಯಾವ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೆ 29 ಜನರನ್ನು ಬಂಧಿಸಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವವರೆಗೂ ಕಾರ್ಯಾಚರಣೆ ನಡೆಯಲಿದೆ ಎಂದರು.
‘ಯಾವುದೇ ವ್ಯಕ್ತಿಯನ್ನು ಬಂಧಿಸಿ ಠಾಣೆಗೆ ವಿಚಾರಣೆಗೆಂದು ಕರೆತಂದ ಸಮಯದಲ್ಲಿ ಆ ವ್ಯಕ್ತಿ ಮೃತಪಟ್ಟರೆ, ಇಲಾಖೆಯ ಮೇಲೆ ಸಂಶಯ ಬಂದು ಕುಟುಂಬದವರು ಸಿಟ್ಟಿಗೇಳುವುದು ಸಹಜ. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿ ಕಾನೂನು ಮೀರಿ ನಡೆಯುವುದು ಅಪರಾಧವಾಗಿರುತ್ತದೆ. ಆದರೆ, ನಿರಪರಾಧಿಗಳನ್ನು ಬಂಧಿಸುವುದಿಲ್ಲ’ ಎಂದರು.
‘ಇಸ್ಪೀಟ್, ಮಟ್ಕಾ, ಗಾಂಜಾ, ಕ್ರಿಕೆಟ್ ಬೆಟ್ಟಿಂಗ್ ಮುಂತಾದವುಗಳನ್ನು ಮಟ್ಟ ಹಾಕಲಾಗುವುದು. ಈ ಘಟನೆಗೆ ಸಂಬಂಧಪಟ್ಟಂತೆ ಸಿಐಡಿ ತನಿಖಾ ತಂಡ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯ ಹೊರಬೀಳಲಿದೆ. ಘಟನೆ ನಡೆದ ಸಂದರ್ಭದಲ್ಲಿ ನಾನು ರಜೆಯಲ್ಲಿದ್ದೆ. ಹಾಗಾಗಿ ಈಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ’ ಎಂದು ಹೇಳಿದರು.
ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಡಿವೈಎಸ್ ಪಿ ಕೆ. ಉಜ್ಜನಕೊಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.