ಚನ್ನಗಿರಿ: ‘ಕೃಷಿ ಪಂಪ್ಸೆಟ್ ಆರ್ಆರ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಮೂಲಕ ಮೀಟರ್ ಅಳವಡಿಸಿ ಶುಲ್ಕ ವಿಧಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ’ ಎಂದು ಆರೋಪಿಸಿ ರೈತ ಸಂಘದ ಸದಸ್ಯರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
‘ಕೃಷಿ ಬಾವಿ ಹಾಗೂ ಕೊಳವೆಬಾವಿಗಳಿಗೆ ವಿದ್ಯುತ್ ಪರಿವರ್ತಕ, ಕಂಬ, ವೈರ್ ಹಾಗೂ ಇತರೆ ಸಾಮಗ್ರಿಗಳನ್ನು ರೈತರು ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು 2023ರಲ್ಲಿ ರಾಜ್ಯ ಸರ್ಕಾರ ನಿಯಮ ಜಾರಿಗೊಳಿಸಿದೆ. ೀ ಹಿಂದೆ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಶುಲ್ಕ ವಸೂಲಿ ಮಾಡುತ್ತಿದ್ದ ಸರ್ಕಾರದ ನೀತಿಯ ವಿರುದ್ಧ ಹೋರಾಟ ಮಾಡಿ, ಉಚಿತ ವಿದ್ಯುತ್ ಪಡೆಯಲಾಗಿತ್ತು. ಸರ್ಕಾರದ ಈ ರೈತ ವಿರೋಧಿ ನೀತಿಯನ್ನು ರದ್ದು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ’ ಎಂದು ಪ್ರತಿಭಟನಕಾರರು ತಿಳಿಸಿದರು.
ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ನಿಗದಿಗೊಳಿಸುವುದು, ಕೃಷಿ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯಗಳಾದ ಭೂಮಿ, ರಸ್ತೆ, ನೀರು, ವಿದ್ಯುತ್, ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಎಂದು ಪ್ರತಿಭಟನಕಾರರು ಹೇಳಿದರು.
ತುಮ್ಕೋಸ್ ಆವರಣದ ಮುಂಭಾಗದಿಂದ ಹೊರಟ ಮೆರವಣಿಗೆ ಬೆಸ್ಕಾಂ ಕಚೇರಿಯವರೆಗೆ ಸಾಗಿತು. ಬೆಸ್ಕಾಂ ಎಇಇ ಮಂಜಾನಾಯ್ಕ ಅವರಿಗೆ ಮನವಿ ಸಲ್ಲಿಸಲಾಯಿತು. ರೈತ ಸಂಘದ ಅಧ್ಯಕ್ಷ ರವಿಕುಮಾರ್, ಪೀರಾನಾಯ್ಕ, ಹಸಿರು ಸೇನೆ ಅಧ್ಯಕ್ಷ ಗಂಡುಗಲಿ ಕುಮಾರ್, ಉಮೇಶ್, ಹನುಮಂತಪ್ಪ, ಆಂಜನೇಯ, ಪ್ರಭಾಕರ್, ಮೂಡಲಗಿರಿಯಪ್ಪ, ಪ್ರಕಾಶ್, ಶಂಕರ್ ನಾಯ್ಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.