ADVERTISEMENT

ಚನ್ನಗಿರಿ: ಅರಣ್ಯಾಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ರೈತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 15:58 IST
Last Updated 29 ಆಗಸ್ಟ್ 2024, 15:58 IST

ಚನ್ನಗಿರಿ: ಬಸವಾಪಟ್ಟಣ ಹೋಬಳಿಯ ಕಂಚುಗಾರನಹಳ್ಳಿ-ಶೃಂಗಾರಬಾಗ್‌ ಗ್ರಾಮದ ಸರ್ವೆ ನಂಬರ್‌ 16ರಲ್ಲಿ 40-50 ವರ್ಷಗಳಿಂದ 52 ಎಕರೆ ಜಮೀನಿನಲ್ಲಿ ಗ್ರಾಮದ 16 ಕುಟುಂಬದವರು ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಗುರುವಾರ ಬೆಳಗಿನ ಜಾವ 5 ಗಂಟೆಗೆ ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಯು ಜಮೀನು ತೆರವುಗೊಳಿಸಲು ಸಿಬ್ಬಂದಿಯನ್ನು ಕಳುಹಿಸಿರುವುದನ್ನು ರೈತ ಸಂಘ ತೀವ್ರವಾಗಿ ವಿರೋಧಿಸುತ್ತಿದೆ ಎಂದು ರಾಜ್ಯ ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ತಾಲ್ಲೂಕು ಘಟಕದ ಅಧ್ಯಕ್ಷ ರವಿಕುಮಾರ್ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚನ್ನಗಿರಿ ಹಾಗೂ ಮಾಯಕೊಂಡ ಕ್ಷೇತ್ರದ ಶಾಸಕರು ಸ್ಥಳ ಪರಿಶೀಲನೆ ಮಾಡುವವರೆಗೂ ಯಾವುದೇ ಕಾರಣಕ್ಕೂ ರೈತರ ಜಮೀನುಗಳನ್ನು ತೆರವುಗೊಳಿಸಬಾರದು ಎಂದು ಎಸಿಎಫ್ ಅವರಿಗೆ ಮೌಖಿಕವಾಗಿ ತಿಳಿಸಲಾಗಿದೆ. ಆದರೂ ವಲಯ ಅರಣ್ಯಾಧಿಕಾರಿ ಜಗದೀಶ್ ಅವರು ತೆರವುಗೊಳಿಸಲು ಅರಣ್ಯ ಸಿಬ್ಬಂದಿಯನ್ನು ಕಳುಹಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ರೈತ ಸಂಘದ ಸದಸ್ಯರು ತೆರವು ಕಾರ್ಯ ಸ್ಥಗಿತಗೊಳಿಸಿದ್ದಾರೆ. ಸಮಸ್ಯೆಯನ್ನು ಉಲ್ಬಣಗೊಳಿಸಿದ ಜಗದೀಶ್ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಪಿ. ಪ್ರಭಾಕರ್, ಗಂಡುಗಲಿ, ಹನುಮಂತಪ್ಪ, ಸುರೇಶ್, ಆಂಜನೇಯ, ಬಸವರಾಜ್, ಶಿವಣ್ಣ, ಚಂದ್ರಶೇಖರಪ್ಪ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.