
ಚನ್ನಗಿರಿ: ‘ಮನುಷ್ಯ ತಿಳಿದೋ, ತಿಳಿಯದೆಯೋ ತಪ್ಪು ಮಾಡಿ, ಎಚ್ಐವಿ ಸೋಂಕಿಗೆ ಒಳಗಾಗಿರುತ್ತಾನೆ. ಸೋಂಕಿತರನ್ನು ಕೀಳರಿಮೆಯಿಂದ ಕಾಣದೇ ಸಮಾಜದಲ್ಲಿ ಇತರರಂತೆ ಬದುಕಲು ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು’ ಎಂದು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜಿ. ಮಹಾಲಕ್ಷ್ಮೀ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ಮತ್ತು ನಿಯಂತ್ರಣ ಘಟಕ ಹಾಗೂ ವಿವಿಧ ಸಂಘ– ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಡೆದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಎಚ್ಐವಿ ಜಗತ್ತಿನ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು. ಇದರ ನಿಯಂತ್ರಣ ಮಾಡುವ ಏಕೈಕ ಮಾರ್ಗವೆಂದರೆ ಈ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಪ್ರತಿ ವರ್ಷ ಡಿಸೆಂಬರ್ನಲ್ಲಿ ಏಡ್ಸ್ ದಿನವನ್ನು ಆಚರಿಸುವ ಮೂಲಕ ಜನರಲ್ಲಿ ಜಾಗೃತಿ ಮುಡಿಸುವ ಕಾರ್ಯದಲ್ಲಿ ತೊಡಗಿದೆ’ ಎಂದು ಹೇಳಿದರು.
‘ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಎಚ್ಐವಿ ಸೋಂಕು ಬರುತ್ತದೆ. ಮನುಷ್ಯ ಆರೋಗ್ಯವಾಗಿದ್ದರೆ ಮಾತ್ರ ಎಂತಹ ಕಠಿಣ ಕೆಲಸವನ್ನಾದರೂ ಮಾಡಲು ಶಕ್ತನಾಗಿರುತ್ತಾನೆ. ಹಾಗಾಗಿ ಮೊದಲು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಡೆಗೆ ಕಾಳಜಿ ವಹಿಸುವುದು ಅವಶ್ಯವಾಗಿದೆ’ ಎಂದರು.
ಮಕ್ಕಳ ತಜ್ಞ ಡಾ.ಅಶೋಕ್ ಉಪನ್ಯಾಸ ನೀಡಿದರು. ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ.ಎಂ. ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಅಧಿಕಾರಿ ಡಾ.ಪಿ.ಡಿ. ಮುರುಳಿಧರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಈ. ಶಿವಕುಮಾರ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಂ.ಎನ್. ಅಮೂಲ್ಯಾ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಎಸ್. ದೇವರಾಜ್, ವಕೀಲರ ಸಂಘದ ಅಧ್ಯಕ್ಷ ಎಚ್. ಮೋಹನ್, ಕಾರ್ಯದರ್ಶಿ ಜಿ.ಎಸ್. ಮೋಹನ್, ವಕೀಲ ವೀರಭದ್ರಪ್ಪ, ಲಯನ್ಸ್ ಕ್ಲಬ್ ಚನ್ನಮ್ಮಾಜಿ ಅಧ್ಯಕ್ಷ ನಾಗರಾಜ ನಾಡಿಗ್, ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಹಮದ್ ಆಪ್ತಭ್, ಹಿರಿಯ ಆರೋಗ್ಯಾಧಿಕಾರಿ ಟಿ. ಲೋಕೇಶ್, ಆಪ್ತ ಸಮಾಲೋಚಕ ಕೆ.ಪಿ. ರವಿಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.