
ಚನ್ನಗಿರಿ: ‘42 ವರ್ಷಗಳಿಂದ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯನಾಗಿ ಪದವೀಧರರು, ಶಿಕ್ಷಕರು ಹಾಗೂ ಕಾರ್ಮಿಕರ ಪರವಾಗಿ ಹೋರಾಟ ಮಾಡಿದ್ದೇನೆ. ಈಗ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಪರಿಷತ್ಗೆ ಆಯ್ಕೆ ಮಾಡಿ ಕಳುಹಿಸಿದರೆ ಪದವೀಧರರು, ಶಿಕ್ಷಕರು ಹಾಗೂ ಕಾರ್ಮಿಕರ ಧ್ವನಿಯಾಗಿ ಕಾರ್ಯನಿರ್ವಹಿಸಲು ಬದ್ಧನಾಗಿದ್ದೇನೆ’ ಎಂದು ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ತಿಳಿಸಿದರು.
ಪಟ್ಟಣದ ರುಕುಮಾಯಿ ಕಲ್ಯಾಣ ಮಂಟಪದಲ್ಲಿ ಶನಿವಾರ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
‘ಹೊಸ ಪಿಂಚಣಿ ಪದ್ಧತಿಯನ್ನು ಜಾರಿಗೆ ತಂದಿದ್ದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ. ಕಾಂಗ್ರೆಸ್ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸಿದ್ಧವಿದೆ. ನಿವೃತ್ತ ನೌಕರರ ಕುಟುಂಬ ನಿರ್ವಹಣೆಗೆ ಪಿಂಚಣಿ ಸೌಲಭ್ಯ ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ಕೂಡಾ ತಿಳಿಸಿದೆ. ಈ ಕ್ಷೇತ್ರದಲ್ಲಿ 6 ಬಾರಿ ಬಿಜೆಪಿ ಅಭ್ಯರ್ಥಿ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಇದನ್ನು ಈ ಬಾರಿ ಕಾಂಗ್ರೆಸ್ ಮುರಿದು ಹಾಕುವುದು ಖಚಿತ’ ಎಂದರು.
ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ ಕುಮಾರ್, ಶಾಸಕ ಬಸವರಾಜು ವಿ. ಶಿವಗಂಗಾ, ಕೆಪಿಸಿಸಿ ಕಾರ್ಯದರ್ಶಿ ವಡ್ನಾಳ್ ಅಶೋಕ್, ಮುಖಂಡರಾದ ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ಸಿ. ನಾಗರಾಜ್, ಅಮಾನುಲ್ಲಾ, ಮಂಜುನಾಥ್, ಸವಿತಾ, ಜಬೀವುಲ್ಲಾ ಉಪಸ್ಥಿತರಿದ್ದರು. ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.