
ಜೆ.ಕೆ. ಹಳ್ಳಿ (ಚನ್ನಗಿರಿ): ‘ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಕಾನೂನಿನಡಿ ಅಪರಾಧವಾಗಿದ್ದು, ಇದನ್ನು ತಡೆಗಟ್ಟಲು ಗ್ರಾಮಸ್ಥರ ಸಹಕಾರ ತುಂಬಾ ಅಗತ್ಯ’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮೋಹನ್ ತಿಳಿಸಿದರು.
ತಾಲ್ಲೂಕಿನ ಜಿ.ಕೆ. ಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಶನಿವಾರ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳ ಬಗ್ಗೆ ಪಾಲಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದಾಯ ಕಡಿಮೆ ಹೊಂದಿರುವ ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ನೆರವಿವಾಗಿ ಕಾನೂನು ಸೇವಾ ಸಮಿತಿಯು ಉಚಿತ ಕಾನೂನು ಸಲಹೆ ನೀಡಲು ನುರಿತ ವಕೀಲರನ್ನು ನೇಮಕ ಮಾಡುತ್ತದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ಭೇಟಿ ನೀಡಬಹುದಾಗಿದೆ ಎಂದರು.
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಎಚ್. ರಮೇಶ್, ಪಿಡಿಒ ಎಂ.ಎ. ಶಫೀವುಲ್ಲಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅವಿನಾಶ್, ವಕೀಲರ ಸಂಘದ ಉಪಾಧ್ಯಕ್ಷ ಸಿ. ತಿಪ್ಪೇಶ್, ಕಾರ್ಯದರ್ಶಿ ಜಿ.ಎಸ್. ಮೋಹನ್, ಸರ್ಕಾರಿ ಅಭಿಯೋಜಕರಾದ ಮಂಜವ್ವ ದಾಸರ್, ಎಲ್. ಸರಿತಾ, ಎಂ. ಸರಿತಾ, ಕೆ.ಎಸ್. ವೀರಭದ್ರಪ್ಪ, ಶೇಷಾಚಲಯ್ಯ, ಜಿ.ಎಸ್. ನಿಂಗರಾಜ್, ಎಂ. ರಾಜಪ್ಪ ಉಪಸ್ಥಿತರಿದ್ದರು. ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಂ.ಆರ್. ಲೋಕೇಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.