ADVERTISEMENT

ದಾವಣಗೆರೆ: ಗಾಂಧಿ–ಅಂಬೇಡ್ಕರ್‌: ಸಂಘರ್ಷ ಇರಲಿಲ್ಲ

ಪ್ರೊ.ಕೃಷ್ಣಪ್ಪ ಟ್ರಸ್ಟ್‌ನ ಟ್ರಸ್ಟಿ ರುದ್ರಪ್ಪ ಹನಗವಾಡಿ ಅಭಿಮತ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 6:57 IST
Last Updated 5 ಡಿಸೆಂಬರ್ 2025, 6:57 IST
ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧೀಜಿ ಅವರ ವಿಚಾರ ಪ್ರಸ್ತುತತೆ’ ಕುರಿತು ಗುರುವಾರ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಪ್ರೊ.ಕೃಷ್ಣಪ್ಪ ಟ್ರಸ್ಟ್‌ನ ಟ್ರಸ್ಟಿ ರುದ್ರಪ್ಪ ಹನಗವಾಡಿ ಉದ್ಘಾಟಿಸಿದರು
ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧೀಜಿ ಅವರ ವಿಚಾರ ಪ್ರಸ್ತುತತೆ’ ಕುರಿತು ಗುರುವಾರ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಪ್ರೊ.ಕೃಷ್ಣಪ್ಪ ಟ್ರಸ್ಟ್‌ನ ಟ್ರಸ್ಟಿ ರುದ್ರಪ್ಪ ಹನಗವಾಡಿ ಉದ್ಘಾಟಿಸಿದರು   

ದಾವಣಗೆರೆ: ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್‌. ಅಂಬೇಡ್ಕರ್‌ ನಡುವೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಗಹನ ಚರ್ಚೆಗಳು ನಡೆದಿವೆ. ಇದನ್ನು ಜಗಳ ಎಂಬಂತೆ ಬಿಂಬಿಸಲಾಗುತ್ತಿದೆ. ಇಬ್ಬರ ನಡುವೆ ಯಾವುದೇ ಸಂಘರ್ಷ ಇರಲಿಲ್ಲ ಎಂದು ಪ್ರೊ.ಕೃಷ್ಣಪ್ಪ ಟ್ರಸ್ಟ್‌ನ ಟ್ರಸ್ಟಿ ರುದ್ರಪ್ಪ ಹನಗವಾಡಿ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧೀಜಿ ಅವರ ವಿಚಾರ ಪ್ರಸ್ತುತತೆ’ ಕುರಿತು ಗುರುವಾರ ಏರ್ಪಡಿಸಿದ್ದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

‘ಗಾಂಧಿ ಮತ್ತು ಅಂಬೇಡ್ಕರ್‌ ಅವರನ್ನು ಬೇರೆಯಾಗಿ ನೋಡುವುದೇ ತಪ್ಪು. ಪರಸ್ಪರ ಒಬ್ಬರನ್ನೊಬ್ಬರು ಗೌರವದಿಂದ ಕಾಣುತ್ತಿದ್ದರು. ಇದನ್ನು ಯುವಜನರು ಅರ್ಥ ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ADVERTISEMENT

‘ಸಾಮಾನ್ಯರಂತೆ ಇದ್ದ ಮಹಾತ್ಮ ಗಾಂಧೀಜಿ ಅವರ ಜೀವನ ಬದಲಿಸಿದ್ದು ಪುಸ್ತಕಗಳು. ಅಹಿಂಸೆಯ ಪ್ರತಿಪಾದಕರಾಗಿ ಬೆಳೆದ ಅವರು ಅಸಮಾನ್ಯರಾಗಿ ಪರಿವರ್ತನೆಯಾದರು. ಮಹಾತ್ಮ ಗಾಂಧೀಜಿ ಅವರ ಆತ್ಮಕಥೆಯನ್ನು ಪ್ರತಿಯೊಬ್ಬರೂ ಓದಬೇಕು. ಈ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಮಹಾತ್ಮ ಗಾಂಧೀಜಿ ಆತ್ಮಕಥನ ಬದುಕಿನ ದಿಕ್ಕು ಬದಲಿಸುವ ಶಕ್ತಿ ಹೊಂದಿದೆ. ದೇಶಪ್ರೇಮ, ಹೋರಾಟ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಗಾಂಧೀಜಿ ಅವರ ಬಗ್ಗೆ ಯುವಸಮೂಹ ತಪ್ಪು ಕಲ್ಪನೆಯನ್ನು ಹೊಂದಿದೆ. ಮಹಾತ್ಮ ಗಾಂಧೀಜಿ ಅವರನ್ನು ಅರ್ಥ ಮಾಡಿಕೊಳ್ಳದೇ ಹೋದರೆ ಬದುಕು ಸರ್ವನಾಶ ಆಗಲಿದೆ’ ಎಂದು ಎಚ್ಚರಿಕೆ ನೀಡಿದರು.

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ. ರಾಮಚಂದ್ರಪ್ಪ, ದಾವಣಗೆರೆ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಅಶೋಕ್ ಕುಮಾರ್ ವಿ.ಪಾಳೇದ, ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ತಳವಾರ್, ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನ ಕಾರ್ಯದರ್ಶಿ ಶಿವನಕೆರೆ ಬಸವಲಿಂಗಪ್ಪ ಹಾಜರಿದ್ದರು.

ಮಹಾತ್ಮ ಗಾಂಧೀಜಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿರುವ ವಿಚಾರಗಳನ್ನು ಯುವಸಮೂಹ ಸತ್ಯವೆಂದು ನಂಬುತ್ತಿದೆ. ವಿಶ್ವ ಮನ್ನಣೆ ಪಡೆದ ನಾಯಕರನ್ನು ಅರಿಯುವಲ್ಲಿ ಸೋಲುತ್ತಿದ್ದೇವೆ.
ಪ್ರೊ.ವೆಂಕಟರಾವ್ ಪಲಾಟೆ, ಮುಖ್ಯಸ್ಥರು ಇತಿಹಾಸ ಮತ್ತು ಪುರಾತತ್ವ ವಿಭಾಗ. ದಾವಣಗೆರೆ ವಿಶ್ವವಿದ್ಯಾನಿಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.